ಮಡಿಕೇರಿ: ಕೊಡಗಿನಲ್ಲಿ ಬಾಲಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ ಅನ್ನುವ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಕಳೆದ ಮೂರೂವರೆ ತಿಂಗಳಲ್ಲಿ 11 ಬಾಲಕಾರ್ಮಿಕರನ್ನು ಜಿಲ್ಲಾ ಕಾರ್ಮಿಕ ಇಲಾಖೆ ಪತ್ತೆ ಮಾಡಿರುವುದು ಅಚ್ಚರಿಯ ಬೆಳವಣಿಗೆಗೆ ಕಾರಣವಾಗಿದೆ.
ಹೌದು, ಗುರುವಾರ ನಡೆದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಗೊಂಡಿತು. ಈ ಬಗ್ಗೆ ಮಾತನಾಡಿದ ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ, ‘ಜಿಲ್ಲೆಯಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕರ ಸಮೀಕ್ಷೆ ಕೈಗೊಳ್ಳಲಾಗಿದೆ. ಕಳೆದ ಮೂರೂವರೆ ತಿಂಗಳಲ್ಲಿ ಹೋಟೆಲ್, ಅಂಗಡಿ, ಕಾರ್ಖಾನೆ, ಕಲ್ಲುಕೋರೆ, ತೋಟ, ಸೇರಿದಂತೆ ಸುಮಾರು 5,077 ಸ್ಥಳಗಳಲ್ಲಿ ತಪಾಸಣಾ ಕಾರ್ಯ ಕೈಗೊಂಡು, 8 ಕಡೆಗಳಲ್ಲಿ 11 ಮಕ್ಕಳನ್ನು ಗುರುತಿಸಿ, ಜೆಎಂಎಫ್ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದರು. ಕಳೆದ ವರ್ಷ 304 ಕಡೆಗಳಲ್ಲಿ ತಪಾಸಣೆ ಕೈಗೊಳ್ಳಲಾಗಿತ್ತು. ಇದರಲ್ಲಿ 10 ಪ್ರಕರಣ ದಾಖಲಿಸಿ, 3 ಪ್ರಕರಣಕ್ಕೆ ಸುಮಾರು ₹ 44 ಸಾವಿರ ದಂಡವನ್ನು ನ್ಯಾಯಾಲಯದ ಮೂಲಕ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು. ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದಂದು ಆಟೊಗಳಿಗೆ ಬ್ಯಾನರ್ ಕಟ್ಟಿ ಪ್ರಚಾರ ಕೈಗೊಳ್ಳಲಾಗಿದೆ. ಬಾಲಕಾರ್ಮಿಕ ಪದ್ಧತಿ ದುಷ್ಪರಿಣಾಮ ಹಾಗೂ ಶಿಕ್ಷಣದ ಮಹತ್ವದ ಬಗ್ಗೆ ಮಾಹಿತಿ ಒಳಗೊಂಡ 2-3 ನಿಮಿಷದ ವಿಡಿಯೊ ಮಾಡಿಸಿ ಜಾಗೃತಿ ಮೂಡಿಸಲಾಗಿದೆ ಎಂದರು.
ಜಿಲ್ಲೆಯಲ್ಲಿರುವ ಕೊಡಗು ಪ್ಲಾಂಟರ್ಸ್ ಅಸೋಷಿಯೇಷನ್, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ಸದಸ್ಯರನ್ನು ಒಟ್ಟುಗೂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಕ್ಕಳು ಕೆಲಸ ಮಾಡುತ್ತಿರುವುದು ಕಂಡು ಬಂದರೆ ಮಕ್ಕಳ ವಯಸ್ಸು, ವಾಸಿಸುವ ಸ್ಥಳ, ವಿದ್ಯಾಭ್ಯಾಸದ ಮಟ್ಟ ಇವುಗಳ ಮಾಹಿತಿಯನ್ನು ವಿಚಾರಿಸುವ ಬಗ್ಗೆ ಸಂಬಂಧಪಟ್ಟ ಎಲ್ಲಾ ಇಲಾಖಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದೂ ಹೇಳಿದರು. ಮಕ್ಕಳ ಸಹಾಯವಾಣಿ-1098 ರ ಬಗ್ಗೆ ಬಾಲಕಾರ್ಮಿಕ ಪದ್ಧತಿ ಕುರಿತ ಕಿರುಚಿತ್ರಗಳನ್ನು ಸಿದ್ಧಪಡಿಸಿ, ಪ್ರತಿ ಶಾಲೆಗಳಿಗೆ ಕಳುಹಿಸಿ, ಇವುಗಳನ್ನು ಪ್ರತಿ ಶಾಲೆಗಳಲ್ಲಿ ಭಿತ್ತರಿಸುವ ಮೂಲಕ ಮಕ್ಕಳಲ್ಲಿ ಹೆಚ್ಚಿನ ಅರಿವು ಮೂಡಿಸಲಾಗಿದೆ ಎಂದು ತಿಳಿಸಿದರು.