ಕೈ ಬಿಟ್ಟು ಮತ್ತೆ ಕಮಲ ಹಿಡಿದ ಜಗದೀಶ್ ಶೆಟ್ಟರ್..! ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೇಳಿದ್ದೇನು?

ನ್ಯೂಸ್ ನಾಟೌಟ್: ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈಗ ಮತ್ತೆ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಇಂದು(ಜ.25)ರಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಶೆಟ್ಟರ್, ಬಿಜೆಪಿ ಸೇರ್ಪಡೆಯಾಗುವುದಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ. ಬಿಜೆಪಿ ಪಕ್ಷಕ್ಕೆ ಮರಳಿದ ಬಗ್ಗೆ ಮಾತನಾಡಿದ ಜಗದೀಶ್ ಶೆಟ್ಟರ್ ‘ನಾನು ಮತ್ತೆ ಬಿಜೆಪಿಗೆ ಸೇರ್ಪಡೆ ಆಗಿರುವುದು ಸಂತೋಷದ ಸಂಗತಿಯಾಗಿದೆ. ಈಗ ನಾನು ಕಾಂಗ್ರೆಸ್ ಸದಸ್ಯತ್ವಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜಿನಾಮೆ ನೀಡುತ್ತಿದ್ದೇನೆ. ನಾನು ಈಗ ಕಾಂಗ್ರೆಸ್‌ ಪಕ್ಷದ ಎಂಎಲ್‌ಸಿ ಆಗಿದ್ದರಿಂದ ಕೂಡಲೇ ಆ ಸ್ಥಾನಕ್ಕೂ ರಾಜಿನಾಮೆ ನೀಡುತ್ತಿದ್ದೇನೆ. ಈ ಬಗ್ಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಫೋನಿನ ಮೂಲಕ ಕರೆ ಮಾಡಿ ಮಾಹಿತಿ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ನಾನು ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದರಿಂದಲೂ ಲೋಕಸಭಾ ಚುನಾವಣೆ ಮುನ್ನೆಲೆಗೆ ಬಂದ ಇತ್ತೀಚಿನವರೆಗೂ 9 ತಿಂಗಳ ಅವಧಿಯಲ್ಲಿ ನಮ್ಮ ಕಾರ್ಯಕರ್ತರು, ಬಿಜೆಪಿ ನಾಯಕರು ಬಿಜೆಪಿ ಸೇರುತ್ತಾರೆ ಎಂಬ ಆಪೇಕ್ಷೆ ಇಟ್ಟುಕೊಂಡಿದ್ದರು. ಇನ್ನು ರಾಷ್ಟ್ರೀಯ ನಾಯಕರ ಆಪೇಕ್ಷೆ ಕೂಡ ಇತ್ತು. ಈ ಕುರಿತು ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ಮಾಡಿದಾಗ ಅವರು ಕೂಡ ಸಂತಸದಿಂದ ಸ್ವಾಗತ ಮಾಡಿ ಬಿಜೆಪಿ ಸೇರ್ಪಡೆಗೆ ಪ್ರೋತ್ಸಾಹಿಸಿದರು. ಈಗ ಬಿಜೆಪಿ ಗೆ ಸೇರಿದ್ದು ಸಂತೋಷ ಆಗಿದೆ. ಎಮ್ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಡಿಕೆಶಿ ಅವರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಇವತ್ತು ದೇಶದ ಮುಂದೆ ಸವಾಲಾಗಿರುವುದು ದೇಶದ ರಕ್ಷಣೆ ಮುಖ್ಯವಾಗಿದೆ. ಪ್ರಧಾನಿ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಹಾಗಾಗಿ ಬಿಜೆಪಿ ಸೇರ್ಪಡೆಯಾಗಿದ್ದೇನೆ ಜಗದೀಶ್ ಶೆಟ್ಟರ್ ಹೇಳಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾದ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ಸಂದರ್ಭ ಕೇಂದ್ರ ಸಚಿವರಾದ ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.