ರಾಷ್ಟ್ರಪತಿಯನ್ನು ಏಕವಚನ ಸಂಬೋಧಿಸಿದ ಸಿಎಂ ಸಿದ್ದರಾಮಯ್ಯ..! ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿದ ಸಿಎಂ

ನ್ಯೂಸ್ ನಾಟೌಟ್: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನಲ್ಲಿ ಸಂಬೋಧಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಶೋಷಿತರ ಜಾಗೃತಿ ಸಮಾವೇಶದಲ್ಲಿನ ಭಾಷಣದಲ್ಲಿ ಸಿದ್ದರಾಮಯ್ಯ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ರಾಷ್ಟ್ರಪತಿಯನ್ನು ಏಕವಚನದಲ್ಲಿ ಉಲ್ಲೇಖಿಸಿದ್ದರು ಎಂದು ವರದಿ ತಿಳಿಸಿದೆ. ಆಕ್ರೋಶ, ವಿವಾದ ಜೋರಾಗುತ್ತಿದ್ದಂತೆ ಸಿದ್ದರಾಮಯ್ಯ ತಮ್ಮ ಮಾತಿಗೆ ವಿಷಾಷ ವ್ಯಕ್ತಪಡಿಸಿದ್ದಾರೆ. ಬಾಯಿತಪ್ಪಿನಿಂದ ಏಕವಚನದಲ್ಲಿ ಸಂಬೋಧಿಸಿದ್ದೇನೆ. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಸಮಾಜದಲ್ಲಿ ಶೋಷಣೆ ನಡೆಯುತ್ತಲೇ ಬಂದಿದೆ. ಜಾತಿ ವ್ಯವಸ್ಥೆ ಈ ಶೋಷಣೆಗೆ ಮುಖ್ಯ ಕಾರಣ. ಈಗಲೂ ಶೋಷಿತರ ಶೋಷಣೆ ನಡೆಯುತ್ತಿದೆ ಎಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಉಲ್ಲೇಖ ಮಾಡಿದ್ದಾರೆ. ಬಿಜೆಪಿ ಸರ್ಕಾರ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ನೀಡಿಲ್ಲ. ರಾಮ ಮಂದಿರ ಉದ್ಘಾಟನೆಗೂ ಆಹ್ವಾನ ನೀಡಿಲ್ಲ ಎಂದು ಭಾಷಣ ಮಾಡಿದ್ದಾರೆ. ಈ ವೇಳೆ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದರು. ಇದರ ವಿರುದ್ಧ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇತ್ತ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿದ್ದರಾಮಯ್ಯ ವಜಾಗೆ ಆಗ್ರಹಿಸಿ್ದರು. ಈ ಬೆಳವಣಿಗೆ ಬೆನ್ನಲ್ಲೇ ಸಿದ್ದಾರಾಮಯ್ಯ ಟ್ವೀಟ್ ಮೂಲಕ ವಿಷಾಧ ವ್ಯಕ್ತಪಡಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ. ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ.ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.