- +91 73497 60202
- [email protected]
- September 20, 2024 2:52 AM
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಇಂದಿಗೆ(ಜು.26) 2 ವರ್ಷ..! ಪ್ರಮುಖ ಆರೋಪಿಗಳು ಇನ್ನೂ ನಿಗೂಢ..!
ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜು. 26ರಂದು ನಡೆದಿದ್ದ ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು (30) ಕೊಲೆ ಪ್ರಕರಣಕ್ಕೆ ಇಂದಿಗೆ (ಜು. 26.2024) 2 ವರ್ಷವಾಗಿದೆ. ಪ್ರಕರಣದಲ್ಲಿ 26 ಮಂದಿಯ ವಿರುದ್ಧ ದೋಷಾರೋಪ ಸಲ್ಲಿಕೆಯಾಗಿದ್ದು, 19 ಮಂದಿಯ ಬಂಧನ ವಾಗಿದೆ. ಉಳಿದ 7 ಮಂದಿ ಆರೋಪಿಗಳಿಗಾಗಿ ಎನ್ಐಎ ಹುಡುಕಾಟ ನಡೆಸುತ್ತಲೇ ಇದೆ. ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಅಕ್ಷಯ ಫ್ರೆಶ್ ಚಿಕನ್ ಫಾರ್ಮ್ ನಡೆಸಿಕೊಂಡು ಬಂದಿದ್ದ ಪ್ರವೀಣ್ 2022ರ ಜು. 26ರ ರಾತ್ರಿ ಸುಮಾರು 8.30ರ ವೇಳೆಗೆ ಅಂಗಡಿ ಬಾಗಿಲು ಹಾಕಿ ಬೈಕ್ನಲ್ಲಿ ಕುಳಿತು ಮನೆಗೆ ಹೊರಡಲು ಸಿದ್ಧರಾಗಿದ್ದರು. ಈ ಸಂದರ್ಭ ಕಾದು ಕುಳಿತಿದ್ದ ದುಷ್ಕರ್ಮಿಗಳು ಪ್ರವೀಣ್ ಮೇಲೆ ದಾಳಿ ನಡೆಸಿ ಹತ್ಯೆಗೈದಿದ್ದರು. ಈ ಪ್ರಕರಣದ ತೀವ್ರ ಸ್ವರೂಪ ಪಡೆದಿದ್ದು, ಅಂದು ಜಿಲ್ಲೆಯ ಪ್ರಮುಖ ಜನಪ್ರತಿನಿಧಿಗಳು ಜನರ ಆಕ್ರೋಶಕ್ಕೆ ತುತ್ತಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲಿಗೆ ಬೆಳ್ಳಾರೆಯ ಶಫೀಕ್, ಸವಣೂರಿನ ಝಾಕೀರ್ನನ್ನು ಕೇರಳದಲ್ಲಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಪ್ರಮುಖ ಆರೋಪಿಗಳಾದ ಶಿಹಾಬುದ್ದೀನ್ ಸುಳ್ಯ, ಬಶೀರ್ ಎಲಿಲೆ, ರಿಯಾಸ್ ಅಂಕತ್ತಡ್ಕ ಮೊದಲಾದವರನ್ನು ಬಂಧಿಸುವುದರೊಂದಿಗೆ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿತ್ತು.(Praveen nettaru) ನಂತರ ಒಂದು ವರ್ಷದ ಅಂತರದಲ್ಲಿ ಮೂವರು ಆರೋಪಿಗಳ ಬಂಧನವಾಗಿದ್ದು, ತುಫೈಲ್ ಮಡಿಕೇರಿಯನ್ನು ಬೆಂಗಳೂರಿನಲ್ಲಿ, ಮುಸ್ತಫಾ ಪೈಚಾರ್ನನ್ನು ಸಕಲೇಶಪುರದಲ್ಲಿ, ರಿಯಾಝ್ ಯೂಸುಫ್ ಹಾರಳ್ಳಿ ಎಂಬಾತನನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಎನ್ಐಎ ಬಂಧಿಸಿದೆ. ಇನ್ನು ಸುಳ್ಯ ತಾಲೂಕಿನ ಉಮ್ಮರ್ ಫಾರೂಕು ಕಲ್ಲುಮುಟ್ಲು, ಅಬೂಬಕ್ಕರ್ ಸಿದ್ದಿಕ್, ಮಸೂದ್ ಅಗ್ನಾಡಿ ಉಪ್ಪಿನಂಗಡಿ, ಶರೀಫ್ ಕೊಡಾಜೆ ಬಂಟ್ವಾಳ, ಅಬ್ದುಲ್ ನಾಸೀರ್ ಕೊಡಗು, ಅಬ್ದುಲ್ ರೆಹಮಾನ್ ಕೊಡಗು, ನೌಷಾದ್ ಬೆಳ್ತಂಗಡಿ ಮೊದಲಾದವರು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ