ವಯನಾಡು ಭೂ ಕುಸಿತದಲ್ಲಿ ಕರ್ನಾಟಕ ಮೂಲದ ಇಬ್ಬರ ಸಾವು, ಮತ್ತಿಬ್ಬರು ನಾಪತ್ತೆ..! ಸಾವಿನ ಸಂಖ್ಯೆ 123ಕ್ಕೆ ಏರಿಕೆ..!

ನ್ಯೂಸ್ ನಾಟೌಟ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 123ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಕರ್ನಾಟಕ ಮೂಲದ ಇಬ್ಬರು ಕೂಡ ಸೇರಿದ್ದಾರೆ ಎಂದು ವರದಿ ತಿಳಿಸಿದೆ. ಒಂದಿಡೀ ಪಟ್ಟಣವೇ ಭೂ ಕುಸಿತದಲ್ಲಿ ಕೊಚ್ಚಿ ಹೋಗಿದೆ. ವಿನಾಶಕಾರಿ ದುರಂತದಲ್ಲಿ ಈ ವರೆಗೂ ಕನಿಷ್ಟ 123 ಮಂದಿ ಸಾವಿಗೀಡಾಗಿದ್ದು, ಈ ಪೈಕಿ ಕರ್ನಾಟಕದ ಚಾಮರಾಜನಗರದ ಇಬ್ಬರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಪುಟ್ಟ ಸಿದ್ದಿ(62) ಹಾಗೂ ರಾಣಿ ಎಂಬವರ ತಾಯಿ ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅವರು ವಯನಾಡಿನ ಮೆಪ್ಪಾಡಿಯಲ್ಲಿ ವಾಸವಿದ್ದರು ಎನ್ನಲಾಗಿದೆ. ಇನ್ನು ಚಾಮರಾಜನಗರ ತಾಲೂಕು ಇರಸವಾಡಿ ಮೂಲದ ರಾಜನ್ ಹಾಗೂ ರಜನಿ ನಾಪತ್ತೆಯಾಗಿದ್ದಾರೆ.ಇವರು ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ವಾಸವಿದ್ದರು. ಇದೀಗ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದು, ರಾಜನ್, ರಜನಿಗಾಗಿ ಶೋಧಕಾರ್ಯ ಮುಂದುವರಿದಿದೆ ಎಂದು ಚಾಮರಾಜನಗರ ಜಿಲ್ಲಾಡಳಿತ ಮಾಹಿತಿ ನೀಡಿದೆ.