ನಿಂತಿದ್ದ ಕಂಟೈನರ್‌ ಗೆ KSRTC ಬಸ್ ಡಿಕ್ಕಿ..! 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ..! ಇಲ್ಲಿದೆ ಸಿಸಿಟಿವಿ ದೃಶ್ಯ

ನ್ಯೂಸ್ ನಾಟೌಟ್: ನಿಂತಿದ್ದ ಕಂಟೈನರ್‌ಗೆ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದಿದ್ದು, 20ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಮಂಡ್ಯದ ಸಾಂಜೋ ಆಸ್ಪತ್ರೆ (Sanjo Hospital) ಬಳಿ ನಡೆದಿದೆ. ಬೆಂಗಳೂರು-ಮೈಸೂರು ದಶಪತ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಬೆಂಗಳೂರು ಕಡೆಯಿಂದ ಮಂಡ್ಯಕ್ಕೆ ತೆರಳುತ್ತಿದ್ದ ಬಸ್ ಎಕ್ಸ್‌ಪ್ರೆಸ್‌ ವೇ ನಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿ ಹೊಡೆದಿದೆ. ಬೆಳಿಗ್ಗೆ 9:50ಕ್ಕೆ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಬಸ್‌ನಲ್ಲಿ 80ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದು, ಕಾಲೇಜು ವಿದ್ಯಾರ್ಥಿಗಳೇ ಹೆಚ್ಚು ಪ್ರಯಾಣ ಮಾಡುತ್ತಿದ್ದರು. 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗೊಂಡಿದ್ದು, 30ಕ್ಕೂ ಹೆಚ್ಚು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳ ಪೈಕಿ ವಿದ್ಯಾರ್ಥಿಗಳೇ ಹೆಚ್ಚು ಗಾಯಗೊಂಡಿದ್ದು, ಜಿಲ್ಲೆಯ ಮಿಮ್ಸ್ ಆಸ್ಪತ್ರೆಗೆ (MIMS Hospital) ರವಾನಿಸಲಾಗಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.