ನ್ಯೂಸ್ ನಾಟೌಟ್ : ಬಿಗ್ ಬಾಸ್ ಅಭಿಮಾನಿಗಳಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡದಿ ಬಳಿ ಇರುವ ಬಿಗ್ಬಾಸ್ ಮನೆಯನ್ನು ತೆರೆಯಲಾಗಿದೆ. ಸ್ಪರ್ಧಿಗಳನ್ನು ಕೂಡ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್ಪಿ ಶ್ರೀನಿವಾಸ್ ಗೌಡ, ತಹಶಿಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್ ಸ್ಟುಡಿಯೋದ ಗೇಟ್ ಸೀಲ್ ಓಪನ್ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ತೆರೆದಿದ್ದೇವೆ. ಜಾಲಿವುಡ್ ಸಂಪೂರ್ಣ ಕಾರ್ಯಾಚರಣೆ ನಡೆಸಲು ಅವಕಾಶ ನೀಡಿಲ್ಲ. ಕೇವಲ ಬಿಗ್ ಬಾಸ್ ಶೋ ಸ್ಪರ್ಧಿಗಳು, ಸಿಬ್ಬಂದಿ ಓಡಾಟ ಹಾಗೂ ಅಗತ್ಯ ವಸ್ತುಗಳ ಬಳಕೆಗೆ ಅವಕಾಶ ಕೊಡಲಾಗಿದೆ. ಬಿಗ್ ಬಾಸ್ ಶೂಟಿಂಗ್ ಆರಂಭದ ಬಗ್ಗೆ ನಾಳೆ ತೀರ್ಮಾನ ಆಗಲಿದೆ ಎಂದು ತಿಳಿಸಿದರು.
ಸದ್ಯಕ್ಕೆ ಬಿಗ್ಬಾಸ್ ಶೋ ನಡೆಯುವ ಜಾಗ ಮಾತ್ರ ತೆರೆಯಲಾಗಿದೆ. ಸರ್ಕಾರದಿಂದ ಅನುಮತಿ ಸಿಕ್ಕಿದ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಬಿಗ್ ಬಾಸ್ ಸಿಬ್ಬಂದಿ ಕ್ಯಾಬ್ ಮೂಲಕ ಆಗಮಿಸಿದ್ದಾರೆ ಎಂದರು.













