ನ್ಯೂಸ್ ನಾಟೌಟ್ : ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಸುಳ್ಯದ
ಯುವಕನೋರ್ವ ಅಲ್ಲಿ ಜಲಪಾತ ವೀಕ್ಷಿಸಲೆಂದು ತೆರಳಿದ್ದ ವೇಳೆ
ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.
ನಂದನ ಅವರು ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು
ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದರು.ಈ ವೇಳೆ ಕಾಲು ಜಾರಿ ಬಿದ್ದು
ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ
ಆಸ್ಪತ್ರೆಯಲ್ಲಿ ಇರಿಸಲಾಗಿದೆ.ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು.ಇವರು ಮಾರಿಷಸ್ ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ
ಆಂಡ್ ಟೂರಿಸಂ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು
ತಿಳಿದುಬಂದಿದೆ.
ಘಟನೆ ನಿನ್ನೆ ನಡೆದಿದೆ ಎನ್ನಲಾಗಿದೆ.ಮೃತದೇಹವನ್ನು ಅಲ್ಲಿನ
ಸರಕಾರದ ವ್ಯವಸ್ಥೆ ಮೂಲಕ ಹಾಗೂ ಇಲ್ಲಿನ ಸರಕಾರದ
ಸಹಾಯದಿಂದ ಕರೆತರಲು ವ್ಯವಸ್ಥೆ ಮಾಡುವಂತೆ ಮೃತ ಯುವಕನ
ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು ಸಂಸದ
ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶ ಸಚಿವ
ಜೈಶಂಕರ್ ಅವರಿಗೆ ಮನವಿ ಮಾಡಿ ಪೂರಕ ಕ್ರಮಕ್ಕೆ ವಿನಂತಿಸಿದ್ದಾರೆ ಎಂದು ತಿಳಿದು ಬಂದಿದೆ.ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಕೂಡ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.













