ನ್ಯೂಸ್ ನಾಟೌಟ್ : ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಡಿಮೆ ವೆಚ್ಚದಲ್ಲಿ ಡಯಾಲಿಸಿಸ್ ಸೇವೆ ನೀಡಲು ಯುವಕರ ತಂಡವು ನಿರ್ಧರಿಸಿದೆ. ತಾಲ್ಲೂಕಿನಲ್ಲಿ ʻದಯಾ ರಿಯಾಬ್ಲಿಟೇಷನ್ ಟ್ರಸ್ಟ್ ತಣಲ್ʼ ಸಂಸ್ಥೆಯ ಸಹಯೋಗದೊಂದಿಗೆ ಪ್ರಾರಂಭಿಸಿದ್ದ ಡಯಾಲಿಸಿಸ್ ಕೇಂದ್ರವು ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿಕೊಂಡಿತ್ತು. ದಾನಿಗಳ ಸಹಕಾರದೊಂದಿಗೆ ರಿಯಾಯಿತಿ ದರದಲ್ಲಿ ಡಯಾಲಿಸಿಸ್ ಸೇವೆಯನ್ನ ನೀಡುತ್ತಿರುವ ಈ ಸಂಸ್ಥೆ ಈಗ ಸಾಲದ ಸುಳಿಯಲ್ಲಿ ಸಿಲುಕಿದೆ. ಕಳೆದ 6 ವರ್ಷಗಳಲ್ಲಿ ಸುಮಾರು 34 ರೋಗಿಗಳಿಗೆ 8,208 ಡಯಾಲಿಸಿಸ್ ಸೇವೆಯನ್ನ ನೀಡಿದ್ದು, 7 ಮಂದಿ ಬಡ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆಯನ್ನು ನೀಡುತ್ತಿದೆ.
ಡಯಾಲಿಸಿಸ್ ಘಟಕ ಆರ್ಥಿಕ ಸಂಕಷ್ಟದಿಂದ ಬಚಾವ್ ಮಾಡುವ ನಿಟ್ಟಿನಲ್ಲಿ ಬಿರಿಯಾನಿ ಚಾಲೆಂಜ್ ಎಂಬ ವಿನೂತನ ಕಾರ್ಯಕ್ರಮವನ್ನು ಯುವಕರ ತಂಡ ಪರಿಚಯಿಸಿತ್ತು. ದಾನಿಗಳಿಂದ ಬಿರಿಯಾನಿ ತಯಾರಿಕೆಗೆ ಬೇಕಾದ ಅಕ್ಕಿ, ಮಾಂಸ, ಸಂಬಾರ ಪದಾರ್ಥಗಳನ್ನು ಸಂಗ್ರಹಿಸಿ ಬಿರಿಯಾನಿ ತಯಾರಿಸಿ ನಂತರ ಇದನ್ನು ಸಂಘ ಸಂಸ್ಥೆಗಳು, ಕಚೇರಿಗಳು, ಮನೆಗಳಿಗೆ ಮಾರಾಟ ಮಾಡಿ, ಬಂದ ಹಣವನ್ನು ಸಂಸ್ಥೆಗೆ ನೀಡಲಾಗುತ್ತದೆ.
ಈ ಮೂಲಕ ನೆಲ್ಲಿಹುದಿಕೇರಿ ಗ್ರಾಮದಲ್ಲಿರುವ ಶಾದಿ ಮಾಹಲ್ನಲ್ಲಿ ಬಿರಿಯಾನಿ ತಯಾರಿಸಿ 200ಕ್ಕೂ ಅಧಿಕ ಯುವಕರು ಮಧ್ಯಾಹ್ನ ಸಮಯದಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಬಿರಿಯಾನಿಗಳನ್ನು ಮಾರಾಟ ಮಾಡಿದ್ದಾರೆ. ಸುಮಾರು 12 ಲಕ್ಷಕ್ಕೂ ಅಧಿಕ ಹಣವನ್ನು ಸಂಗ್ರಹಿಸಿ ಡಯಾಲಿಸಿಸ್ ಸೆಂಟರ್ನ ವ್ಯವಸ್ಥಾಪಕರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆಯ ಮಾತುಗಳು ಕೇಳಿ ಬಂದಿವೆ.













