ನ್ಯೂಸ್ ನಾಟೌಟ್ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲಿನಲ್ಲಿ ನ.3ರಂದು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಾಲಾಭಿವೃದ್ಧಿ ಸಮಿತಿ ಮಂಡೆಕೋಲು ವತಿಯಿಂದ ಕನ್ನಡ ಗಾನಯಾನ ಕಾವ್ಯ ಮಿಲನ ಕಾರ್ಯಕ್ರಮ ನಡೆಯಿತು.
ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಮುರಳೀಧರ ರೈ ಮೆರವಣಿಗೆಗೆ ಚಾಲನೆ ನೀಡಿದರು. ಶಾಲಾ ಮಕ್ಕಳು ಘೋಷ ವಾಕ್ಯಗಳ ಮೂಲಕ, ಬ್ಯಾಂಡ್ ಸೆಟ್ ನೊಂದಿಗೆ ರಸ್ತೆಯ ಉದ್ದಗಲಕ್ಕೂ ಘೋಷವಾಕ್ಯ ನುಡಿಯುತ್ತಾ ಮೆರವಣಿಗೆಯಲ್ಲಿ ಸಾಗಿ ಬಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ರಾಷ್ಟ್ರ ಧ್ವಜಾರೋಹಣ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸುರೇಶ್ ಕಣೆಮರಡ್ಕ ಕನ್ನಡ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖ್ಯಾತ ವೈದ್ಯ ಡಾ. ಅನಂತಪದ್ಮನಾಭ ಭಟ್ ಎರ್ಕಲ್ಪಾಡಿ, ಗಡಿನಾಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗಿದೆ ಎಂದರು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷ ಚಂದ್ರಶೇಖರ್ ಪೇರಾಲ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯೋತ್ಸವ ಉಪನ್ಯಾಸ ಕಾರ್ಯಕ್ರಮ ವನ್ನು ಕ.ಸಾ.ಪದ ಕಾರ್ಯಾಕಾರಿ ಸಮಿತಿ ಸದಸ್ಯರು, ಅಜ್ಜಾವರ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಗೋಪಿನಾಥ್ ಮೆತ್ತಡ್ಕ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲು ಇದರ ಮುಖ್ಯ ಶಿಕ್ಷಕಿ ಮಂಜುಳಾ, ಕ.ಸಾ.ಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷ ಚಂದ್ರಾವತಿ ಬಡ್ಡಡ್ಕ, ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಮುರಳೀಧರ ರೈ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿನುತಾ ಪಾತಿಕಲ್ಲು ಉಪಸ್ಥಿತರಿದ್ದರು. ಸುರೇಶ್ ಕಣೆಮರಡ್ಕ ಸ್ವಾಗತಿಸಿ ರಾಮಚಂದ್ರ ಪಲ್ಲತ್ತಡ್ಕ ವಂದಿಸಿದರು. ಕಸಾಪ ನಿರ್ದೇಶಕಿ ಸಾವಿತ್ರಿ ಕಣೆಮರಡ್ಕ ನಿರೂಪಿಸಿದರು.













