ನ್ಯೂಸ್ ನಾಟೌಟ್ :ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡೋತ್ಸವ – 2025 ಅನ್ನು ಡಿಸೆಂಬರ್ 16 ಮಂಗಳವಾರದಂದು ಎನ್ಎಂಸಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಗಣ್ಯರು ಧ್ವಜಾರೋಹಣ ನೆರವೇರಿಸುವುದರೊಂದಿಗೆ ವಾರ್ಷಿಕ ಕ್ರೀಡೋತ್ಸವದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಬಳಿಕ ಅತಿಥಿಗಳ ಸಮ್ಮುಖದಲ್ಲಿ ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸಿ, ಕ್ರೀಡಾಸ್ಫೂರ್ತಿ, ಶಿಸ್ತು ಹಾಗೂ ಏಕತೆಯ ಸಂಕೇತವಾಗಿ ಕಾರ್ಯಕ್ರಮ ಅಧಿಕೃತವಾಗಿ ಪ್ರಾರಂಭಗೊಂಡಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಆಡಳಿತಾಧಿಕಾರಿ ಪ್ರೊ.ಕೆ.ವಿ ದಾಮೋಧರ ಗೌಡ, ಕ್ರೀಡೆಗಳು ಶಾರೀರಿಕ ಆರೋಗ್ಯವಷ್ಟೇ ಅಲ್ಲದೆ, ಶಿಸ್ತು, ಸಹನೆ, ಹಾಗೂ ನಾಯಕತ್ವ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇಂತಹ ಕ್ರೀಡೋತ್ಸವಗಳು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದರು.
ಮುಖ್ಯ ಅತಿಥಿಯಾಗಿ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದ ಅನಸ್ತೇಶಿಯಾಲಜಿ ವಿಭಾಗದ ಮುಖ್ಯಸ್ಥೆ ಪ್ರೊ.ಡಾ. ಬೀನಾ ರಾಣಿ ಚೆಮ್ಮಾಂಚೆರಿ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿಗಳ ಹಾಗೂ ತಂಡಭಾವನೆಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಅಗತ್ಯವಾದ ಶಾರೀರಿಕ ಸಾಮರ್ಥ್ಯ, ಮಾನಸಿಕ ದೃಢತೆ, ಶಿಸ್ತು, ಸಮಯಪಾಲನೆ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ದೇಹವು ಪ್ರಕೃತಿಯ ಅಮೂಲ್ಯ ಕೊಡುಗೆ. ಅಲ್ಲದೇ ಆರೋಗ್ಯಕರ ದೇಹವೇ ಯಶಸ್ವಿ ಜೀವನದ ಮೂಲವೆಂದು ಹೇಳುತ್ತಾ ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಟೀನಾ ಹೆಚ್.ಎಸ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಕಲಾವತಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ರಮ್ಯಾ ಕೆ. ಎಂ ಹಾಗೂ ಚಂದನ ಪಿ..ಎಸ್ ಪ್ರಾರ್ಥಿಸಿದರು. ಪ್ರೊ. ಟೀನಾ ಹೆಚ್. ಎಸ್ ಸ್ವಾಗತಿಸಿದರು. ಉಪನ್ಯಾಸಕರಾದ ಕಲಾವತಿ ವಂದಿಸಿ, ಸುಚಿತ್ರ ಜನಾರ್ಧನ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು.













