ನ್ಯೂಸ್ ನಾಟೌಟ್: ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ 97ನೇ ಜಯಂತ್ಯೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಎರಡು ದಿನಗಳ ಕಾಲ ನಡೆಯುವ ಅದ್ಧೂರಿ ‘ಕೆವಿಜಿ ಸುಳ್ಯ ಹಬ್ಬ’ಕ್ಕೆ ಡಿ.25ರಂದು ಸಂಭ್ರಮದ ಚಾಲನೆ ದೊರೆತಿದೆ.
ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಯೊಂದಿಗೆ ಆರಂಭಗೊಂಡಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟು ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆಯನ್ನು ಶ್ರೀ ಚೆನ್ನಕೇಶವ ದೇಗುಲದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ನೆರವೇರಿಸಿದರು.




ಮುಖ್ಯ ಅತಿಥಿಯಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಟಿ ವಿಶ್ವನಾಥ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಬಂಟ್ವಾಳ್, ಕೋಶಾಧಿಕಾರಿ ಚಂದ್ರಾವತಿ ಬಡ್ಡಡ್ಕ, ನಿಕಟಪೂರ್ವ ಅಧ್ಯಕ್ಷ ಡಾ.ಎನ್.ಎ.ಜ್ಞಾನೇಶ್, ಕ್ರೀಡಾ ಸಂಚಾಲಕ ದೊಡ್ಡಣ್ಣ ಬರೆಮೇಲು, ಸಾಂಸ್ಕೃತಿಕ ಸ್ಪರ್ಧಾ ಸಮಿತಿ ಸಂಚಾಲಕಿ ಧನಲಕ್ಷ್ಮಿ ಕುದ್ಪಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಧನಲಕ್ಷ್ಮಿ ಕುದ್ಪಾಜೆ ಸ್ವಾಗತಿಸಿ, ದೊಡ್ಡಣ್ಣ ಬರೆಮೇಲು ವಂದಿಸಿದರು. ಮಮತಾ ರವೀಶ್ ಪಡ್ಡಂಬೈಲು ಹಾಗೂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕಬಡ್ಡಿ, ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಆರಂಭಗೊಂಡವು.













