ನ್ಯೂಸ್ ನಾಟೌಟ್: ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ತನಿಖೆ ಸಂಬಂಧ ರಾಜ್ಯ ಸರ್ಕಾರ ಬುಧವಾರ(ಎ.9) ಹೊಸದಾಗಿ ಸೈಬರ್ ಅಪರಾಧ ತಡೆ ಘಟಕವನ್ನು (ಸಿಸಿಪಿಯು) ಸ್ಥಾಪಿಸಿ ಆದೇಶ ಹೊರಡಿಸಿದೆ.
ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಅತಿಯಾದ ಬಳಕೆ ಹಾಗೂ ಅವಲಂಬನೆಯಿಂದ ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿದ್ದು, ಹಳೆಯ ವೃತ್ತಿಪರ ಅಪರಾಧಗಳಾದ ಡಕಾಯಿತಿ, ರಾಬರಿ ಹಾಗೂ ಇತರೆ ಭೌತಿಕ ಕಳ್ಳತನಗಳನ್ನು ಹಿಂದಿಕ್ಕಿ ಸೈಬರ್ ಅಪರಾಧಗಳು ವರದಿಯಾಗುತ್ತಿವೆ ಎನ್ನಲಾಗಿದೆ.
ದೇಶದ ಮಹಾನಗರಗಳಲ್ಲಿ ದಾಖಲಾಗುವ ಅಪರಾಧ ಪ್ರಕರಣಗಳಲ್ಲಿ ಶೇ.20ರಷ್ಟು ಸೈಬರ್ ಪ್ರಕರಣಗಳಾಗಿದ್ದು, ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ ಒಟ್ಟಾರೆಯಾಗಿ 52,000 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿವೆ. ಕರ್ನಾಟಕವು ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ದಾಖಲಾಗುವ ಸೈಬರ್ ಅಪರಾಧಗಳ ಸಂಖ್ಯೆಯಲ್ಲಿ ಮಂಚೂಣಿಯಲ್ಲಿ ಇರುವುದರಿಂದ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರತ್ಯೇಕ ಸೈಬರ್ ಅಪರಾಧ ತಡೆ ಘಟಕ ಮಾಡುವಂತೆ ಸರ್ಕಾರಕ್ಕೆ ಡಿಜಿಪಿ ಪ್ರಸ್ತಾಪನೆ ಸಲ್ಲಿಸಿದ್ದರು.
ಈ ಪ್ರಸ್ತಾಪಕ್ಕೆ ಸರ್ಕಾರ ಸಮ್ಮತಿಸಿದೆ. ಈ ಘಟಕದ ವ್ಯಾಪ್ತಿಗೆ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 43 ಸಿಇಎನ್ (ಸೈಬರ್, ಎಕನಾಮಿಕ್ಸ್ & ನಾರ್ಕೋಟಿಕ್ಸ್) ಪೊಲೀಸ್ ಠಾಣೆಗಳನ್ನು ಸೈಬರ್ ಅಪರಾಧ ಪೊಲೀಸ್ ಠಾಣೆಗಳೆಂದು ಮರುನಾಮಕರಣ ಮಾಡಿ ಒಳಪಡಿಸಲಾಗಿದೆ. ಅಲ್ಲದೆ ಸಿಐಡಿ ಸೈಬರ್ ಹಾಗೂ ಬೆಂಗಳೂರಿನ ಸೈಬರ್ ಠಾಣೆಗಳು ಸೇರಿ ಒಟ್ಟು 45 ಠಾಣೆಗಳ ಅಧೀನಕ್ಕೆ ಬರುತ್ತವೆ. ಈ ಠಾಣೆಗಳು ಅಬಕಾರಿ ಕಾಯ್ದೆ, ಲಾಟರಿ ನಿಷೇಧ ಕಾಯ್ದೆ, ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ (ಯುಎಪಿಎ),
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಮತ್ತು ಇತರ ಸೂಕ್ಷ್ಮ ವಿಚಾರಗಳ ಹರಡುವಿಕೆ ಸೇರಿದಂತೆ ಇತರೆ ಕಾಯ್ದೆಗಳಲ್ಲಿ ತನಿಖೆ ನಡೆಸಬಹುದು ಎಂದಿದೆ. ಅಲ್ಲದೆ ಸೈಬರ್ ಕಮಾಂಡ್ ಘಟಕಕ್ಕೆ ನಾಲ್ವರು ಎಸ್ಪಿಗಳು ಸೇರಿದಂತೆ 193 ಅಧಿಕಾರಿ- ಸಿಬ್ಬಂದಿ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿಲ್ಲ ಎಂದ ಅಣ್ಣಾಮಲೈ..! ಉಡುಪಿಗೆ ಬಂದಿದ್ದ ವೇಳೆ ಹೇಳಿಕೆ..!