ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಎಂ. ಚೆಂಬು ಗ್ರಾಮದಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿದ್ದಲಿಂಗು ಎನ್ (28 ವರ್ಷ), ರಘು (26 ವರ್ಷ) ಇಬ್ಬರನ್ನು ಬಂಧಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಮನೆಯ ಗೋದ್ರೇಜ್ ನ ಸಣ್ಣ ಕ್ಯಾಶ್ ಲಾಕರ್ ನಲ್ಲಿ ಇಟ್ಟಿದ್ದ 120 ಗ್ರಾಂ ಚಿನ್ನಾಭರಣ, 15 ಸಾವಿರ ರೂ. ನಗದನ್ನು ಇತ್ತೀಚೆಗೆ ಯಾರೂ ಇಲ್ಲದ ಸಮಯ ನೋಡಿಕೊಂಡು ಕಳ್ಳರು ದೋಚಿದ್ದರು.
ಆರೋಪಿಗಳ ಪತ್ತೆಗಾಗಿ ಮಡಿಕೇರಿ ಉಪವಿಭಾಗ ಡಿ ವೈ ಎಸ್ ಪಿ ಸೂರಜ್, ಮಡಿಕೇರಿ ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕ ಚಂದ್ರಶೇಖರ್.ಹೆಚ್.ವಿ. ಪಿಎಸ್ಐ ಮಂಜುನಾಥ್ ಹಾಗೂ ಸಿದ್ದಾಪುರ ಪೊಲೀಸ್ ಠಾಣೆ ಮತ್ತು ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿ & ತಾಂತ್ರಿಕ ಸಿಬ್ಬಂದಿ ಒಳಗೊಂಡಂತೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ನ. 10 ರಂದು ಕಳ್ಳತನದ ಆರೋಪಿಗಳಾದ ಶಿವಮೊಗ್ಗ ಜಿಲ್ಲೆ ಭದ್ರವಾತಿ ತಾ। ಸಿದ್ದಾಪುರ ಗ್ರಾಮದ ಇಬ್ಬರನ್ನು ಬಂಧಿಸಲಾಯಿತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅವರಿಂದ ನಗದು ಮತ್ತು 120 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.













