ನ್ಯೂಸ್ ನಾಟೌಟ್ : ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು (Housewife) ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.
ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ ಎಂದು ತಿಳಿದು ಬಂದಿದೆ.ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಮಹಾದೇವಿ ಎರಡನೇ ಮದುವೆ ಸಂದರ್ಭ ಕುಟುಂಬಸ್ಥರು ವರದಕ್ಷಿಣೆ ರೂಪದಲ್ಲಿ 100 ಗ್ರಾಂ ಚಿನ್ನ ನೀಡಿದ್ದರು. ಆದರೆ ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಕುಮಾರ್, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಮನನೊಂದಿದ್ದ ಮಹಾದೇವಿ ನಂತರ ಹಾಸನ ಮಹಿಳಾ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ಬಳಿಕ ಡೆತ್ನೋಟ್ ಬರೆದಿಟ್ಟು ಮಗುವಿನೊಂದಿಗೆ ವೀಡಿಯೋ ಮಾಡಿದ್ದರು.
ಪತಿಯ ನಿಂದನೆ ಸಹಿಸಲು ಆಗುತ್ತಿಲ್ಲ. ನಾನು ಬದುಕಿರುವುದರಿಂದ ಅವನಿಗೆ ತೊಂದರೆ. ನನ್ನ ಸಾವಿಗೆ ನನ್ನ ಗಂಡ, ನನ್ನ ಅತ್ತೆ ಕಾರಣ. ಯಾವುದು ಬೇಡ, ಹೋರಾಟ ಮಾಡಲು, ಓಡಾಡಲು ಆಗುತ್ತಿಲ್ಲ. ನಾನು ಇದ್ದರೆ ತಮ್ಮ, ಅಪ್ಪ-ಅಮ್ಮನಿಗೂ ತೊಂದರೆ. ಬಾಯಿಗೆ ಬಂದಂತೆ ಬಯ್ಯುತ್ತಾನೆ. ಮೂರು ವರ್ಷದಿಂದ ನರಕ ಕೊಟ್ಟಿದ್ದಾನೆ. ಪೊಲೀಸರು ಹೇಳುವಷ್ಟು ಹೇಳಿದ್ದಾರೆ. ನನ್ನ ತಮ್ಮ, ಅಪ್ಪ, ಅಮ್ಮ ಎಲ್ಲರಿಗೂ ಜೀವ ಬೆದರಿಕೆ ಹಾಕಿದ್ದಾನೆ. ನನ್ನಿಂದ ಅವರ ಜೀವನ ಏಕೆ ಹಾಳಾಗಬೇಕು? ಮಗು ನನಗೆ ಹುಟ್ಟಿಲ್ಲ ಅಂತಾನೆ. ಇದನ್ನೆಲ್ಲಾ ಕೇಳಿಕೊಂಡು ಬದುಕಲು ಆಗಲ್ಲ, ಈ ಜೀವನವೇ ಬೇಡ ನನಗೆ ಎಂದು ಆತ್ಮಹತ್ಯೆಗೂ ಮುನ್ನ ಮಹಾದೇವಿ ವೀಡಿಯೋ ಮಾಡಿಟ್ಟು ನಾಪತ್ತೆಯಾಗಿದ್ದರು.
ಬಳಿಕ ಮಹಾದೇವಿಗಾಗಿ ಎಲ್ಲೆಡೆ ಹುಡುಕಾಟ ನಡೆಸಲಾಯಿತು. ಸೋಮವಾರ ಅರಕಲಗೂಡು ತಾಲೂಕಿನ, ಬೆಟ್ಟಸೋಗೆ ಬಳಿ ಮಹಾದೇವಿ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ರಾಮನಾಥಪುರದ ಬಳಿಯ ಕಾವೇರಿ ನದಿಗೆ ಒಂದೂವರೆ ವರ್ಷದ ಮಗುವಿನೊಂದಿಗೆ ಹಾರಿ ಮಹಾದೇವಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಮಗುವಿನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.













