ನ್ಯೂಸ್ ನಾಟೌಟ್ : ಕಾಂತಾರ ಅಧ್ಯಾಯ-1ರ ಕ್ಲಮ್ಯಾಕ್ಸ್ನಲ್ಲಿ ನಟ ರಿಷಬ್ ನಟಿಸಿದ್ದ ಚಾವುಂಡಿ ದೈವದ ಪಾತ್ರಕ್ಕೆ ಬಾಲಿವುಡ್ ನಟ ರಣ್ವೀರ್ ಸಿಂಗ್ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೆ ಅವರು ಕ್ಷಮೆಯಾಚಿಸಿದ್ದಾರೆ.
ರಣ್ವೀರ್ ಸಿಂಗ್ ಅವರ ನಡೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆ ಬೆನ್ನಲ್ಲೆ ರಣ್ವೀರ್ ಸಿಂಗ್ ಅವರು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ‘ನಾನು ಯಾರದ್ದಾದರೂ ಭಾವನೆಗಳಿಗೆ ನೋವುಂಟು ಮಾಡಿದ್ದರೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ಈ ಕುರಿತು ರಣವೀರ್ ಇನ್ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. `ಕಾಂತಾರ ಚಾಪ್ಟರ್ 1′ ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಉದ್ದೇಶವಾಗಿತ್ತು. ನಾನೊಬ್ಬ ನಟನಾಗಿ ಆ ನಿರ್ದಿಷ್ಟ ದೃಶ್ಯದಲ್ಲಿ ನಟಿಸುವುದು ಎಷ್ಟು ಸವಾಲಾಗಿರುತ್ತದೆ ಎನ್ನೋದು ನನಗೆ ಚೆನ್ನಾಗಿ ಗೊತ್ತು. ಅವರ ನಟನೆಗೆ ಅಪಾರ ಮೆಚ್ಚುಗೆಯಿದೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಹಾಗೂ ನಂಬಿಕೆಯನ್ನು ನಾನು ಗೌರವಿಸುತ್ತೇನೆ. ನನ್ನಿಂದ ನಿಮ್ಮ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಿರಲಿ. ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಈ ಸಂಬಂಧ ಹಿಂದೂ ಜನಜಾಗೃತಿ ಸಮಿತಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದೆ. ಸಮುದಾಯ ಆರಾಧಿಸುವ ಚಾಮುಂಡಿದೇವಿಯನ್ನು ಹೆಣ್ಣು ದೆವ್ವ ಎಂದು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಡೆದಿದ್ದೇನು?
ಗೋವಾದಲ್ಲಿ ನಡೆದ 56ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಟನೆಯನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ಅಪಹಾಸ್ಯ ಮಾಡಿದ್ದರು. ಇದರ ಬೆನ್ನಲ್ಲೇ ತುಳುನಾಡಿನ ದೈವಕ್ಕೆ ರಣವೀರ್ ಸಿಂಗ್ ಅಪಮಾನ ಮಾಡಿದ್ದಾರೆಂದು ಸೋಷಿಯಲ್ ಮೀಡಿಯಾ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ರಿಷಬ್ ಅವರ ಕಾಂತಾರ ಸಿನಿಮಾವನ್ನು ಥಿಯೇಟರ್ನಲ್ಲಿ ನೋಡಿದ್ದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್ ಸಿಂಗ್ ಅನುಕರಣೆ ಮಾಡಿದ್ದರು. ಅನುಕರಣೆ ಮಾಡಿದ್ದಕ್ಕೆ ದೈವಾರಾಧಕರು ಆಕ್ರೋಶ ಹೊರಹಾಕಿದ್ದರು. ಕಾರ್ಯಕ್ರಮ ನಡೆಯುವಾಗ ರಿಷಬ್ ಶೆಟ್ಟಿ ಮುಂದಿನ ಸಾಲಿನಲ್ಲೇ ಕುಳಿತಿದ್ದರು. ರಣವೀರ್ ಅನುಕರಣೆಗೆ ಸ್ವತಃ ರಿಷಬ್ ಅವರೇ ನಕ್ಕಿದ್ದಾರೆ ಎನ್ನಲಾಗಿತ್ತು. ಆದರೆ ರಿಷಬ್ ಬೇರೆ ಸಂದರ್ಭದಲ್ಲಿ ನಕ್ಕಿದ್ದನ್ನು ಈ ಸಂದರ್ಭಕ್ಕೆ ಸೇರಿಸಿ, ಎಡಿಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ













