ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಯಾದ್ಯಂತ ಈಗ ಹುತ್ತರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕೊಡಗಿನಲ್ಲಿ ಆಚರಿಸುವ ಕೆಲವು ಹಬ್ಬಗಳಲ್ಲಿ ಹುತ್ತರಿ ಹಬ್ಬ ಬಹಳ ಪ್ರಮುಖ. ಕೊಡಗಿನ ಸುಗ್ಗಿಹಬ್ಬ ಎಂದೇ ಹೆಸರಾಗಿರುವ ಹುತ್ತರಿ ಹಬ್ಬವನ್ನು ಮನೆಮನೆಗಳಲ್ಲಿ ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ. ಧಾನ್ಯಲಕ್ಷ್ಮಿಗೆ ಭಕ್ತಿ ಭಾವದೊಂದಿಗೆ ಭತ್ತದ ಗದ್ದೆಯಿಂದ ಮನೆಗಳಿಗೆ ತಂದು ತುಂಬಿಸಿಕೊಳ್ಳುವ ವಿಶೇಷ ಹಬ್ಬ ಹುತ್ತರಿ. ಕೊಡಗಿನವರ ಜನಪದ ಕಲೆಗಳು ಅನಾವರಣವಾಗುವುದು ಕೂಡ ಇದೇ ಹಬ್ಬದಲ್ಲಿ.
ಮುಂಗಾರು ಆರಂಭದಲ್ಲಿ ಗದ್ದೆಯನ್ನು ಉತ್ತು-ಬಿತ್ತಿ ಕಟಾವಿನ ಹಂತಕ್ಕೆ ತಂದ ಕೊಡಗಿನವರು, ಭೂ ದೇವಿಗೆ ಕೃತಜ್ಞತಾ ಪೂರ್ವಕವಾಗಿ ಹಬ್ಬವನ್ನು ಆಚರಿಸಿಸುತ್ತಾರೆ. ಹುತ್ತರಿ ಎಂದರೆ ಹೊಸ ಅಕ್ಕಿ ಎಂದರ್ಥ. ಕೊಡಗಿನಲ್ಲಿ ಇದು ಪುತ್ತರಿ ಹಬ್ಬ ಎಂದೇ ಫೇಮಸ್. ಭತ್ತದ ಗದ್ದೆಯಿಂದ ಧಾನ್ಯಲಕ್ಷ್ಮಿಯನ್ನು ವಿಜೃಂಭಣೆಯಿಂದ ಮನೆಗೆ ತಂದು ತುಂಬಿಸಿಕೊಳ್ಳುವುದೇ ಹುತ್ತರಿ ಹಬ್ಬದ ವಿಶೇಷ. ಕೇರಳದ ಓಣಂ ಹಬ್ಬ ಕಳೆದು ಸರಿಯಾಗಿ ಮೂರು ತಿಂಗಳಲ್ಲಿ ಈ ಹಬ್ಬ ನಡೆಯುತ್ತದೆ.
ಮನೆಗಳನ್ನು ಸುಣ್ಣ ಬಣ್ಣದಿಂದ ತಳಿರು ತೋರಣಗಳಿಂದ ಶೃಂಗಾರಗೊಳಿಸಲಾಗಿರುತ್ತದೆ. ಇಂದು ಕೊಡಗು ಜಿಲ್ಲೆಯಾದ್ಯಂತ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಈ ಹಬ್ಬದಂದು ಸಾಂಪ್ರದಾಯಿಕ ಉಡುಪಿನಲ್ಲಿ ಮಹಿಳೆಯರು ಮತ್ತು ಪುರುಷರು ಕಂಗೊಳಿಸಿದರೆ, ಮತ್ತೊಂದೆಡೆ ಗಾಳಿಯಲ್ಲಿ ಗುಂಡು ಹಾರಿಸಿ ಭತ್ತದ ಗದ್ದೆಗೆ ಪೂಜೆ ಸಲ್ಲಿಸುವುದರ ಮೂಲಕ ತಮ್ಮ ಸಂಸ್ಕೃತಿಯನ್ನು ಅನಾವರಣಗೊಳಿಸುತ್ತಾರೆ.













