ನ್ಯೂಸ್ ನಾಟೌಟ್ : ಇತ್ತೀಚೆಗೆ ಬಳ್ಳಾರಿಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾದ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಭಾನುವಾರ ತಿಳಿಸಿದ್ದಾರೆ.
ಜನವರಿ 1 ರಂದು ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕಾಗಿ ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ಬ್ಯಾನರ್ ಅಳವಡಿಸುವ ವಿಚಾರವಾಗಿ ನಡೆದ ಗಲಾಟೆಯು ವಿಕೋಪಕ್ಕೆ ತಿರುಗಿ ಘರ್ಷಣೆ ಭುಗಿಲೆದ್ದಿತ್ತು. ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಅವರ ಖಾಸಗಿ ಗನ್ ಮ್ಯಾನ್ ನಡೆಸಿದ ಫೈರಿಂಗ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವಿಗೀಡಾಗಿದ್ದಾರೆ.
ಈ ಘಟನೆಯಲ್ಲಿ ಗುಂಡು ಹಾರಿಸಲಾಗಿದ್ದು, ಖಾಸಗಿ ವ್ಯಕ್ತಿಗಳ ಬಂದೂಕುಗಳ ಬಳಕೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ನಾನು ಇದನ್ನೇ ಮೊದಲು ಹೇಳಿದ್ದೆ, ಭದ್ರತೆಗಾಗಿ ನೇಮಿಸಿಕೊಂಡಿದ್ದ ಖಾಸಗಿ ಗನ್ಮ್ಯಾನ್ಗಳ ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈಗ ಬ್ಯಾಲಿಸ್ಟಿಕ್ ತಜ್ಞರ ವರದಿಯು ಯಾವ ಬಂದೂಕಿನಿಂದ ಗುಂಡು ಹಾರಿಸಲಾಗಿದೆ ಎಂಬುದನ್ನು ಬಹಿರಂಗಪಡಿಸುತ್ತದೆ. ತನಿಖಾ ವರದಿಯನ್ನು ನೀಡುವಂತೆ ನಾನು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳಿಗೆ ಹೇಳಿದ್ದೇನೆ. ಪ್ರಕ್ರಿಯೆ ನಡೆಯುತ್ತಿದೆ. ಪೊಲೀಸ್ ಬಂದೂಕಿನಿಂದ ಗುಂಡು ಹಾರಿಲ್ಲ ಎಂದು ಎಡಿಜಿಪಿ ನನಗೆ ಹೇಳಿದ್ದರು’ ಎಂದು ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದರು.













