ನ್ಯೂಸ್ ನಾಟೌಟ್: ಬಿಜಪಿಯಲ್ಲಿ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಕೇಂದ್ರ ಹಾಗೂ ರಾಜ್ಯದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಸುಳ್ಯ ಮೂಲದ ಡಿವಿ ಸದಾನಂದ ಗೌಡರಿಗೆ ಈ ಸಲ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಸ್ವತಃ ಈ ವಿಚಾರವನ್ನು ಪಕ್ಷದ ಮೂಲಗಳು ನ್ಯೂಸ್ ನಾಟೌಟ್ ಗೆ ಖಚಿತಪಡಿಸಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ಗೆ ಈಗಿನಿಂದಲೇ ಹಲವು ನಾಯಕರ ನಡುವೆ ಪೈಪೋಟಿ ಆರಂಭವಾಗಿದೆ ಎಂದು ತಿಳಿದು ಬಂದಿದೆ.
ಕಳೆದ ಹಲವು ವರ್ಷಗಳಿಂದ ಡಿವಿ ರಾಜಕೀಯ ಜೀವನದಲ್ಲಿ ಸಕ್ರಿಯರಾಗಿದ್ದಾರೆ. ಎರಡು ಸಲ ಶಾಸಕರಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ, ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ, ಲೋಕಸಭಾ ಸದಸ್ಯರಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿ, ಮುಖ್ಯಮಂತ್ರಿಯಾಗಿ, ಕೇಂದ್ರ ರೈಲ್ವೆ ಸಚಿವರಾಗಿ, ಕೇಂದ್ರ ಕಾನೂನು ಸಚಿವರಾಗಿ ಹೀಗೆ ಹಲವು ಹುದ್ದೆಗಳನ್ನು ನಿಭಾಯಿಸಿದ್ದಾರೆ. 2004 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಲೋಕಸಭಾ ಚುನಾವಣೆಗೆ ನಿಂತಿದ್ದ ಡಿವಿ ಸದಾನಂದ ಗೌಡ ಭರ್ಜರಿ ಗೆಲುವು ಸಾಧಿಸಿದ್ದರು.
ಆನಂತರ ಅವರ ವಿರುದ್ಧ ದಕ್ಷಿಣ ಕನ್ನಡದಲ್ಲಿ ಕೆಲಸ ಮಾಡಿಲ್ಲ ಅನ್ನುವ ಆರೋಪಗಳು ಕೇಳಿ ಬಂದಿದ್ದವು. ಆನಂತರದ ಚುನಾವಣೆಯಲ್ಲಿ ಸದಾನಂದ ಗೌಡ ದಕ್ಷಿಣ ಕನ್ನಡದಿಂದ ಸ್ಪರ್ಧಿಸುವ ಧೈರ್ಯ ಮಾಡಲಿಲ್ಲ. ನಂತರ ಅವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಮೂರನೇ ಸಲ ಅವರು ಗೆದ್ದಿದ್ದು ಬೆಂಗಳೂರು ಉತ್ತರ ಕ್ಷೇತ್ರದಿಂದ. ಈ ಸಲ ಅವರಿಗೆ ಅಲ್ಲಿಂದ ಟಿಕೆಟ್ ಸಿಗುವುದಿಲ್ಲ ಅನ್ನುವ ಮಾತುಗಳು ಕೇಳಿ ಬರುತ್ತಿದೆ. ಹೀಗಾಗಿ ಅವರ ಮುಂದಿನ ನಡೆ ಏನು ಅನ್ನುವುದು ಸಹಜವಾಗಿಯೇ ಕುತೂಹಲ ಕೆರಳಿಸಿದೆ.