ನ್ಯೂಸ್ ನಾಟೌಟ್ : ಕಾಂತಾರ ಚಾಪ್ಟರ್-1 ನೋಡಿ ಮೈ ಮೇಲೆ ದೈವ ಅವಾಹನೆ ಆಯ್ತು ಅನ್ನೋರ ವಿರುದ್ಧ ರಿಷಬ್ ಶೆಟ್ಟಿ ಅಂಡ್ ಟೀಂ ಅಸಮಾಧಾನ ಹೊರಹಾಕಿದೆ, ಮಾತ್ರವಲ್ಲ ಎಚ್ಚರಿಕೆಯನ್ನೂ ನೀಡಿದೆ.
ಅತೀರೇಕದ ವರ್ತನೆ ತೋರಿದವರ ವಿರುದ್ಧ ಕಾನೂನು ಹೋರಾಟ ಮಾಡುವ ಎಚ್ಚರಿಕೆಯನ್ನ ನೀಡಿದೆ. ಸೋಷಿಯಲ್ ಮೀಡಿಯಾ ಮೂಲಕ ಚಿತ್ರ ತಂಡ ಮನವಿ ಮಾಡಿಕೊಂಡಿದೆ. ಅಭಿಮಾನಿಗಳಿಗೆ ಬುದ್ಧಿ ಹೇಳುವಂತೆ ಬೆಂಗಳೂರು ತುಳುಕೂಟ ಚಿತ್ರ ತಂಡಕ್ಕೆ ಮನವಿ ಮಾಡಿಕೊಂಡಿತ್ತು. ಬೆನ್ನಲ್ಲೇ ಚಿತ್ರತಂಡ ಅಭಿಮಾನಿಗಳಿಗೆ ಮನವಿ ಮಾಡಿದೆ.
ಪ್ರೇಕ್ಷಕರೇ. ಅವಾಹನೆ ಮಾಡಿಕೊಳ್ಳುವುದನ್ನು ಬಿಡಿ
ಸಿನಿಪ್ರಿಯರೇ,
ದೈವಾರಾಧನೆ ತುಳುನಾಡಿನ ನಂಬಿಕೆಯ ಪ್ರತೀಕ. ಅದು ತುಳುವರ ಅಸ್ಮಿತೆ. ದೈವದ ಬಗೆಗಿನ ಅಪಾರ ಗೌರವ ಮತ್ತು ಅಚಲ ಶ್ರದ್ಧೆಗೆ ಕಿಂಚಿತ್ತೂ ಚ್ಯುತಿ ಬಾರದಂತೆ ದೈವಗಳ ಮಹಿಮೆಯನ್ನು ಸಾರುವ ಭಕ್ತಿಪೂರ್ವಕ ಕಥೆಯನ್ನು ನಾವು ಕಾಂತಾರ ಸಿನೆಮಾದಲ್ಲಿ ತೋರಿಸಿದ್ದೇವೆ. ತುಳು ಮಣ್ಣಿನ ಮಹತ್ವ ಹಾಗೂ ಪರಂಪರೆಯನ್ನು ಇಡೀ ಜಗತ್ತಿಗೆ ಸಾರುವಲ್ಲಿ ನಮ್ಮದ್ದಾದ ಕೊಡುಗೆಯನ್ನು ಕೊಟ್ಟಿದ್ದೇವೆ. ಆದರೆ ಕೆಲವರು ಸಿನೆಮಾದಲ್ಲಿ ಬರುವ ಪಾತ್ರಗಳನ್ನು ಅನುಕರಿಸಿ ಎಲ್ಲೆಂದರಲ್ಲಿ ಅನುಚಿತ ರೀತಿಯ ವರ್ತನೆಗಳನ್ನು ಮಾಡುವುದು ಚಿತ್ರತಂಡದ ಗಮನಕ್ಕೆ ಬಂದಿದೆ. ಇದು ನಮ್ಮ ನಂಬಿಕೆಗೆ ಮಾಡುವ ಅಪಚಾರವೂ ಹೌದು, ಅಕ್ಷಮ್ಯ ಅಪರಾಧವೂ ಹೌದು. ಇಂತಹ ವರ್ತನೆಗಳನ್ನು ನಾವು ಖಂಡಿತ ಸಹಿಸುವುದಿಲ್ಲ ಅದುದರಿಂದ ಚಿತ್ರಮಂದಿರ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಲ್ಲಿ, ಸಭೆ, ಸಮಾರಂಭಗಳಲ್ಲಿ ಯಾರಾದರೂ ದೈವಗಳನ್ನು ಅನುಕರಣೆ ಮಾಡಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಹೊಂಬಾಳೆ ಫಿಲ್ಮ್ಸ್ ಮತ್ತು ರಿಷಬ್ ಶೆಟ್ಟಿ













