ನ್ಯೂಸ್ ನಾಟೌಟ್ :ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ.ರಾಜ್ಯ ಸರ್ಕಾರವು ಅನುದಾನಿತ ಶಾಲೆಗಳಿಗೆ 6,000 ಅತಿಥಿ ಶಿಕ್ಷಕರು, ಸರ್ಕಾರಿ ಶಾಲೆಗಳಿಗೆ 12,000 ಶಿಕ್ಷಕರು ಸೇರಿದಂತೆ 18,000 ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ.ಈ ಮೂಲಕ ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆ ನಡೆಯಲಿದೆ.
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಇಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಅಧಿಕಾರ ವಹಿಸಿಕೊಂಡ 11 ತಿಂಗಳಲ್ಲಿ ಸರ್ಕಾರಿ ಶಾಲೆಗಳಿಗೆ ಸುಮಾರು 13,500 ಶಿಕ್ಷಕರನ್ನು ನೇಮಿಸಿಕೊಂಡಿರುವುದಾಗಿ ಹೇಳಿದರು.
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಸರ್ಕಾರ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಿದೆ. ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ನಾಲ್ಕರಿಂದ ಐದು ಸಾವಿರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲಿದ್ದು, ಸರ್ಕಾರದಿಂದಲೇ ಗೌರವ ಧನ ಪಾವತಿಸಲಾಗುವುದು ಎಂದು ತಿಳಿಸಿದರು.
1995ರ ನಂತರದ 10 ವರ್ಷಗಳ ಅವಧಿಯಲ್ಲಿ ಆರಂಭವಾದ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಪ್ರಸ್ತಾವನೆ ಸಿದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ ತಕ್ಷಣ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದಲ್ಲದೆ, ಅಂಗವಿಕಲ ಮಕ್ಕಳಿಗೆ ಚಿಕಿತ್ಸೆ ಮತ್ತು ಶಿಕ್ಷಣವನ್ನು ಒಂದೇ ಕಡೆ ಒದಗಿಸುವ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಎರಡು ಹೊಸ ವಸತಿಯುತ ಶಾಲೆಗಳನ್ನು ಆರಂಭಿಸಲಾಗುವುದು ಎಂದೂ ಘೋಷಿಸಿದರು. ಇದೇ ವೇಳೆ ಟಿಇಟಿ ಮತ್ತು ಸಿಇಟಿ ಪರೀಕ್ಷೆಗಳಿಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ ಎಂದು ಹೇಳಿದರು.













