ನ್ಯೂಸ್ ನಾಟೌಟ್: ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿ ರಾಜ್ಯ ಮತ್ತು ಕೇಂದ್ರ ಗೃಹ ಸಚಿವರುಗಳಿಗೆ ಪತ್ರ ಬರೆಯಲಾಗಿತ್ತು ಎಂಬ ವಿಚಾರಕ್ಕೆ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಸಮುದಾಯದ ಹೆಣ್ಣು ಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ಗೆ ಕೊಡವ ಸಂಘಟನೆಯಿಂದ ಪತ್ರ ಬರೆಯಲಾಗಿದೆ ಎನ್ನಲಾಗಿತ್ತು. ಈವರೆಗೂ ಯಾವುದೇ ಪತ್ರ ಬಂದಿಲ್ಲ ಎಂದು ರಾಜ್ಯ ಗೃಹಸಚಿವರು ತಿಳಿಸಿದ್ದಾರೆ.
ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ, ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ, ಈವರೆಗೂ ಯಾವುದೇ ಪತ್ರ ಬಂದಿಲ್ಲ. ಇದರ ಬಗ್ಗೆ ಕಚೇರಿಯಲ್ಲಿ ವಿಚಾರಿಸುತ್ತೇನೆ ಎಂದಿದ್ದಾರೆ.
ಇತ್ತೀಚಿಗೆ ಶಾಸಕ ರವಿ ಗಣಿಗ ಅವರು ರಶ್ಮಿಕಾ ವಿರುದ್ಧ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಕೊಡವ ನ್ಯಾಷನಲ್ ಕೌನ್ಸಿಲ್ ನಟಿಯ ಪರ ನಿಂತಿದೆ. ರಶ್ಮಿಕಾ ಮಂದಣ್ಣ ನಮ್ಮ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು. ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರಿಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನ ತಿಳಿಯದ ಕೆಲವರು ವಿನಾಕಾರಣ ಟೀಕೆ ಮಾಡುವ ಮೂಲಕ ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದು ಘೋರ ಮಾತ್ರವಲ್ಲದೆ ಬೆದರಿಕೆಗೆ ಸಮ ಎಂದು ಪತ್ರದಲ್ಲಿ ದೂರಿದ್ದಾರೆ ಎನ್ನಲಾಗಿತ್ತು.