ನ್ಯೂಸ್ ನಾಟೌಟ್ : ಶಿಕ್ಷಣವೆಂದರೆ ಕೇವಲ ಪುಸ್ತಕದ ಒಳಗಿನ ವಿಚಾರವಲ್ಲ. ಜ್ಞಾನವನ್ನು ಹೆಚ್ಚಿಸುವ ಜೀವನ ವಿಧಾನವಾಗಬೇಕು. ಸಣ್ಣ ಗ್ರಾಮ ಒಂದರಲ್ಲಿ ದಿವಂಗತ ಡಾ. ಕುರುಂಜಿಯವರು ಹಚ್ಚಿದ ಸಣ್ಣ ಹಣತೆಯೊಂದು ವಿಸ್ತಾರವಾಗಿ ಬೆಳೆದು ಜಗತ್ತಿನಾದ್ಯಂತ ಬೆಳಕು ಚೆಲ್ಲಿರುವುದು ಒಂದು ಅದ್ಭುತ ಎಂದು ಭಾರತೀಯ ಸೇನೆಯ ನಿವೃತ್ತ ಸೇನಾನಿ, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.
ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಶುಕ್ರವಾರ (ಅ.24) 2025-26ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಹಿರಿಯರ ಮಾರ್ಗದರ್ಶನ, ಶಿಸ್ತು, ಮೌಲ್ಯ, ಪ್ರೇರಣೆ ನಮಗೆ ಆದರ್ಶವಾಗಬೇಕಾಗಿದೆ. ವಿದ್ಯಾರ್ಥಿ ದೆಸೆಯಿಂದಲೇ ವ್ಯಕ್ತಿತ್ವ ನಿರ್ಮಾಣವಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಕಾರ್ಯದರ್ಶಿ ಹೇಮನಾಥ್ ಕೆ.ವಿ ಮಾತನಾಡಿ, ಕಾಲೇಜಿನ ಸಮಗ್ರ ಅಭಿವೃದ್ಧಿಯನ್ನು ಬೆಳೆಸುವಲ್ಲಿ ವಿದ್ಯಾರ್ಥಿ ಸಂಘ ಬಹಳ ಮುಖ್ಯ. ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಲು ಸಹಕರಿಸಿ ಎಂದು ಹೇಳಿ ನೂತನವಾಗಿ ಆಯ್ಕೆಗೊಂಡ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲಾನಾಧಿಕಾರಿ ರತ್ನಾವತಿ ಡಿ ವಿದ್ಯಾರ್ಥಿ ಸಂಘದ ಎಲ್ಲ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶ ಸಂಯೋಜಕಿ ಡಾ. ಮಮತ ಕೆ. ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಚಲನ ಟಿ, ಉಪಾಧ್ಯಕ್ಷ ಹರ್ಷಿತ್ ಕೆ ಎಲ್, ಖಜಾಂಚಿ ಆದಿತ್ಯನ್ ತಮ್ಮ ಅಭಿಪ್ರಾಯ ಹಂಚಿಕೊಂಡರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪವನ್, ಉಪಾಧ್ಯಕ್ಷ ದಿಶಾಂತ್ ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೀಲಯ ಪ್ರಾರ್ಥಿಸಿ, ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ಅನಂತಲಕ್ಷ್ಮಿ ವಂದಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಭವ್ಯ ಮನು ಪೆರುಮುಂಡ ಕಾರ್ಯಕ್ರಮ ನಿರೂಪಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ. ಇವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಅತ್ಯಂತ ವ್ಯವಸ್ಥಿತವಾಗಿ ಮೂಡಿಬಂದಿತ್ತು. ವಿದ್ಯಾರ್ಥಿ ಸಂಘದ ನಾಯಕರನ್ನು ವೈಯುಕ್ತಿಕ ಚಟುವಟಿಕೆಗಳನ್ನು ನೀಡಿ ಕೌಶಲ್ಯ ಸಾಮರ್ಥ್ಯದ ಮೇಲೆ ಆಯ್ಕೆ ಮಾಡಿದ್ದರು. ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ನೆಹರೂ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ ಉಪಸ್ಥಿತರಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಕಾಲೇಜಿನ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.













