ಸುಳ್ಯ: ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2020-21ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿರುವ ಸರ್ವಾಂಗೀಣ ಪ್ರಗತಿಯನ್ನು ಗುರುತಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಡಿ. 14ರಂದು ಮಂಗಳೂರಿನಲ್ಲಿ ನಡೆದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ರವರು ಸಂಘದ ಉಪಾಧ್ಯಕ್ಷರಾದ ದಯಾನಂದ ಕುರುಂಜಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ರವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಶ್ರೀ ಮೊನಪ್ಪ ಶೆಟ್ಟಿ ಎಕ್ಕಾರು, ರಾಜೇಶ್ ರಾವ್, ಜಯರಾಮ ರೈ, ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ನಾಯಕ್ ಸಂಘದ ನಿರ್ದೇಶಕರಾದ ವಿನೋದ್ ಉಳುವಾರು, ಚಿತ್ರಾ ಶಶಿಧರ ದೇರಾಜೆ, ನಿಧೀಶ್ ಅರಂತೋಡು ಮತ್ತು ಸಂಘದ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಪುತ್ಯ ರವರು ಉಪಸ್ಥಿತರಿದ್ದರು.