ನ್ಯೂಸ್ ನಾಟೌಟ್: ಭಾರತ ಐಕ್ಯತಾ ಯಾತ್ರೆ ಇಂದು ರಾಜ್ಯದಲ್ಲಿ ಮುಕ್ತಾಯವಾಗಲಿದೆ. ಸೆ.30 ರಿಂದ ಆರಂಭವಾದ ಯಾತ್ರೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಯಾತ್ರೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಯುವಕರು, ಮಹಿಳೆಯರು, ರೈತರು ಹಾಗೂ ಮಕ್ಕಳು ಬಹಳ ಉತ್ಸಾಹದಿಂದ ಭಾಗವಹಿಸಿದ್ದಾರೆ. ಇವರು ಪಕ್ಷವನ್ನು ನೋಡಿಲ್ಲ. ಈ ಎಲ್ಲರೂ ಬದುಕು, ಭವಿಷ್ಯ, ದೇಶದಲ್ಲಿ ಶಾಂತಿ ಮರುಸ್ಥಾಪನೆ, ನಿತ್ಯ ಸಮಸ್ಯೆಗಳ ವಿರುದ್ಧ ಹೋರಾಡಲು ಈ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ
ಇಂದಿರಾ ಗಾಂಧಿ ಅವರ ಕಾಲದಲ್ಲಿ ಅವರನ್ನು ನೋಡಿ ಖುಷಿ ಪಡಲು ಜನ ಹಳ್ಳಿ, ಹಳ್ಳಿಗಳಿಂದ ಆಗಮಿಸಿದಂತೆ ಇಂದು ರಾಹುಲ್ ಗಾಂಧಿ ಅವರನ್ನು ನೋಡಿ ಶುಭಕೋರಲು ಉತ್ಸುಕರಾಗಿ ಬರುತ್ತಿದ್ದಾರೆ. ಜತೆಗೆ ಅವರ ಆಚಾರ, ವಿಚಾರ, ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಎಂದರು. ಪಕ್ಷದ ರಾಜ್ಯ ಅಧ್ಯಕ್ಷನಾಗಿ ಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಜಾತಿ, ಧರ್ಮ, ಪಕ್ಷ ಬೇಧ ಮರೆತು ಎಲ್ಲ ವರ್ಗದವರು ಈ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಈ ನಡಿಗೆ ದೇಶಕ್ಕೆ ಒಂದು ಕೊಡುಗೆ ಎಂದು ಅಭಿಪ್ರಾಯಪಟ್ಟರು.