ನ್ಯೂಸ್ ನಾಟೌಟ್: ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ರಜತ್ ಕಿಶನ್ ಇಂದು(ಎ.16) ಮತ್ತೆ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣ ಸಂಬಂಧ ರಜತ್ ಅಲಿಯಾಸ್ ಬುಜ್ಜಿಗೆ ಪೊಲೀಸರು ನೋಟಿಸ್ ನೀಡಿದ್ದರು.
ರೀಲ್ಸ್ ನಲ್ಲಿ ಬಳಸಿದ್ದ ಮಚ್ಚು ಎಲ್ಲಿ ಹೋಯ್ತು ಅನ್ನೋ ಸ್ಪಷ್ಟ ಮಾಹಿತಿ ಇನ್ನೂ ಪೊಲೀಸರಿಗೆ ಲಭ್ಯವಾಗಿಲ್ಲ. ಹೀಗಾಗಿ ಅಸಲಿ ಮಚ್ಚಿನ ಸಂಬಂಧ ಪೊಲೀಸರ ತನಿಖೆ ಮುಂದುವರಿದಿದೆ. ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ರಜತ್ ಕಿಶನ್ ಇಂದು ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ವಿಚಾರಣೆಗೆ ಹಾಜರಾಗಿರುವ ರಜತ್ ಕಿಶನ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ರೀಲ್ಸ್ ಕೇಸ್ನಲ್ಲಿ ಈಗಾಗಲೇ ರಜತ್ ಅವರು ಒಮ್ಮೆ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು. ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದ ಹಿನ್ನೆಲೆಯಲ್ಲಿ ರಿಲೀಸ್ ಆಗಿದ್ದರು.
ಪ್ರಕರಣದಲ್ಲಿ ಜಾಮೀನು ನೀಡಿದ್ದ ನ್ಯಾಯಾಲಯ ಪ್ರತಿ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಿತ್ತು. ಆದ್ರೆ ರಜತ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿ ರಜತ್ ವಿರುದ್ಧ ವಾರೆಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ರಜತ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ರಜತ್ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಇಂದು ಮಧ್ಯಾಹ್ನ 1 ಗಂಟೆ ವೇಳೆಗೆ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.