ನ್ಯೂಸ್ ನಾಟೌಟ್ :ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಹಕ್ಕಿ ಜ್ವರ ಕರ್ನಾಟಕದಲ್ಲಿ ಹಬ್ಬುತ್ತಿರುವ ಶಂಕೆ ಶುರುವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದ ಸುತ್ತ 1 ಕಿ ಲೋ ಮೀಟರ್ ಅಪಾಯಕಾರಿ ವಲಯ ಎಂದು ಗುರುತು ಮಾಡಿದ್ದಾರೆ. ಕೋಳಿ ಫಾರ್ಮ್ ಸುತ್ತ ಸ್ಪ್ರೇ, ಪೌಡರ್ ಸಿಂಪಡಣೆ ಮಾಡಲಾಗಿದೆ.
ಶುಕ್ರವಾರ ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ದೃಢಪಟ್ಟಿತ್ತು. ವರದಹಳ್ಳಿ ಎಂಬ ಗ್ರಾಮದಲ್ಲಿ 45 ಕೋಳಿಗಳು ಮೃತಪಟ್ಟಿದ್ದವು. ಈ ಬೆನ್ನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಲರ್ಟ್ ಆಗಿದೆ. ಇಲಾಖೆಯ ಸಿಬ್ಬಂದಿ ಮನೆಮನೆಗೆ ತೆರಳಿ ಸಮೀಕ್ಷೆ ಮಾಡುತ್ತಿದ್ದಾರೆ. ಹಕ್ಕಿಜ್ವರ ಮನುಷ್ಯರಿಗೆ ಹರಡಿದೆಯೇ ಎಂಬ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.
ಅಧಿಕಾರಿಗಳ ಸೂಚನೆಗೆ ಮೇರೆಗೆ ಗ್ರಾಮದಲ್ಲಿದ್ದ ಎಲ್ಲಾ ನಾಟಿ ಕೋಳಿಗಳನ್ನು ಹಿಡಿದು ಕೊಲ್ಲಲಾಗಿದೆ. ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇನ್ನು ಗಡಿ ಜಿಲ್ಲೆ ರಾಯಚೂರಿನಲ್ಲೂ ಹಕ್ಕಿ ಜ್ವರದ ಆತಂಕ ಮನೆ ಮಾಡಿದೆ. ಕೋಳಿ ಉತ್ಪನ್ನ, ಹಕ್ಕಿ ಸಾಗಾಣಿಕೆಗೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲಿಸುವಂತೆ ಸೂಚಿಸಲಾಗಿದೆ. ಇಷ್ಟು ದಿನ ನೆರೆ ರಾಜ್ಯದಲ್ಲಿ ಹಾವಳಿ ಸೃಷ್ಟಿಸಿದ್ದ ಹಕ್ಕಿಜ್ವರ, ರಾಜ್ಯದಲ್ಲೂ ಅಟ್ಟಹಾಸ ಮೆರೆಯುತ್ತಿದೆ. ಒಂದೆಡೆ, ಕೋಳಿಗಳ ಮಾರಣಹೋಮವೇ ನಡೆಯುತ್ತಿದ್ದರೆ, ಮತ್ತೊಂದೆಡೆ ಬರ್ಡ್ ಫ್ಲೂ ಹರಡುವಿಕೆ ತಡೆಗೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದ್ದಾರೆ.