ನ್ಯೂಸ್ ನಾಟೌಟ್: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮೊಮ್ಮಗ, ಬಿ.ವೈ ರಾಘವೇಂದ್ರ ಪುತ್ರ ಸುಭಾಷ್ ಇಂದು(ಜೂ.8) ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಪಾಲ್ಗೊಂಡು ನವಜೋಡಿಗಳಿಗೆ ಶುಭಹಾರೈಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುಭಾಷ್ ಹಾಗೂ ಶ್ರಾವಣಾ ಅದ್ಧೂರಿ ಆರತಕ್ಷತೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವರೂ ಆಗಿರುವ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಜಗದೀಪ್ ಧನಕರ್ , ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ್ ಪಾಲ್ಗೊಂಡು, ನವ ವಧು-ವರರಿಗೆ ಶುಭ ಹಾರೈಸಿದರು.
ಈ ಸಂಭ್ರಮದಲ್ಲಿ ಜಮೀರ್ ಅಹ್ಮದ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಿದ್ದರು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ.ವೈ ರಾಘವೇಂದ್ರ ಶಾಲು ಹೊದಿಸಿ ಗೌರವಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರಾಘವೇಂದ್ರ ಪತ್ನಿ ಶಾಲು ಹೊದಿಸಿ ಸ್ವಾಗತಿಸಿದರು.
ಮಾರ್ಚ್ 24ರಂದು ಕಲಬುರಗಿಯಲ್ಲಿ ಬಿಎಸ್ ವೈ ಪುತ್ರನ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು.
ಬಿವೈ ರಾಘವೇಂದ್ರ ಪುತ್ರ ಸುಭಾಷ್ ಕಲಬುರಗಿಯ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ-ದೀಪಾಲಿ ದಂಪತಿಯ ಪುತ್ರಿ ಶ್ರಾವಣ ಎಂಬವರನ್ನು ಭಾನುವಾರ (ಇಂದು) ವರಿಸಲಿದ್ದಾರೆ.