ನ್ಯೂಸ್ ನಾಟೌಟ್: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಕೆಪಿಸಿಸಿಯ ಐವರನ್ನೊಳಗೊಂಡ ವೀಕ್ಷಕರ ತಂಡ ಸುಳ್ಯಕ್ಕೆ ಆಗಮಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರಿಂದ ಸಮೀಕ್ಷೆ ನಡೆಸಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು ಹೇಳಿದರು.
ಸುಳ್ಯ ಪ್ರೆಸ್ಕ್ಲಬ್ನಲ್ಲಿ ಅಧ್ಯಕ್ಷರ ನೇಮಕಾತಿ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್ ಹಿರಿಯ ಮುಖಂಡ ರಾಧಾಕೃಷ್ಣ ಬೊಳ್ಳೂರು ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷರು ಆದೇಶ ಹೊರಡಿಸಿದ್ದರು. ಈ ಆದೇಶಕ್ಕೆ ಸುಳ್ಯದ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಕೆಪಿಸಿಸಿ ಅಧ್ಯಕ್ಷರಿಗೆ ದೂರು ನೀಡಿದ್ದರು. ಇದರಿಂದ ನೇಮಕಾತಿಗೆ ತಾತ್ಕಾಲಿಕ ತಡೆಯಾಗಿತ್ತು. ಬಳಿಕ ಕೆಪಿಸಿಸಿ ಉಪಾಧ್ಯಕ್ಷ ಸುದರ್ಶನ್ ಮತ್ತು ನಾರಾಯಣ ಸ್ವಾಮಿ ನೇತೃತ್ವದ ಸಮಿತಿ ಮಂಗಳೂರಿನಲ್ಲಿ ಸಭೆ ನಡೆಸಿ ಕಾರ್ಯಕರ್ತರು ಮತ್ತು ಮುಖಂಡರಿಂದ ಮಾಹಿತಿ ಸಂಗ್ರಹಿಸಿ ಕೆಪಿಸಿಸಿಗೆ ಕಳುಹಿಸಲಾಗಿತ್ತು. ಆದರೆ ಕೆಪಿಸಿಸಿ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಲಿಲ್ಲ.
ಇದೀಗ ಮತ್ತೊಂದು ಭಾರಿ ಸುಳ್ಯದಲ್ಲಿ ಐವರನ್ನೊಳಗೊಂಡ ಸಮಿತಿ ಆಗಮಿಸಲಿದ್ದು, ಇಲ್ಲಿನ ಕಾರ್ಯಕರ್ತರು ಮತ್ತು ಮುಖಂಡರಿಂದ ಮಾಹಿತಿ ಸಂಗ್ರಹಿಸಿ ಕೆಪಿಸಿಸಿಗೆ ಕಳುಹಿಸಿದ ಬಳಿಕ ಅಂತಿಮ ನಿರ್ಧಾರ ಪ್ರಕಟವಾಗಲಿದೆ. ಈ ಹಿಂದೆ ಕೆಪಿಸಿಸಿ ವೀಕ್ಷಕರ ವರದಿಯ ಪ್ರಕಾರ ಮತ್ತು ಪಕ್ಷದ ನಿಯಮದಂತೆ ನನ್ನನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದರು. ಕಾರಣಾಂತರದಿಂದ ತಡೆಯಾಗಿದೆ. ಶೀಘ್ರದಲ್ಲಿ ಈ ಸಮಸ್ಯೆ ಬಗೆಹರಿದು ಮತ್ತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗುವ ವಿಶ್ವಾಸವಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಯುವಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಜಯಪ್ರಕಾಶ್ ನೆಕ್ರಪ್ಪಾಡಿ ಇದ್ದರು.