ನ್ಯೂಸ್ ನಾಟೌಟ್: ಇತ್ತೀಚೆಗೆ ನಡೆದ ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದ ದಿವ್ಯಾಂಶಿ ತಾಯಿ ಅಶ್ವಿನಿ ಇಂದು ಕಮರ್ಶಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮರಣೋತ್ತರ ಪರೀಕ್ಷೆ ವೇಳೆ ಮಗಳ ಮೃತದೇಹದಿಂದ ಕಿವಿಯೋಲೆ ಕಳವಾಗಿದೆ ಎಂದು ದೂರು ನೀಡಿದ್ದಾರೆ.
ಮರಣೋತ್ತರ ಪರೀಕ್ಷೆಯ ಬಳಿಕ ಮಗಳ ಕಿವಿಯೋಲೆ ನಾಪತ್ತೆಯಾಗಿದೆ. ಹಾಗಾಗಿ ಬೌರಿಂಗ್ ಆಸ್ಪತ್ರೆಯ ವಿರುದ್ಧ ದೂರು ಕೊಟ್ಟಿದ್ದೇನೆ ಎಂದು ದಿವ್ಯಾಂಶಿ ತಾಯಿ ಮಾಧ್ಯಮದ ಜತೆ ತಿಳಿಸಿದ್ದಾರೆ. ದಿವ್ಯಾಂಶಿಯ ಹುಟ್ಟುಹಬ್ಬದ ಸಂದರ್ಭದಲ್ಲಿ ಆಕೆಯ ಮಾವ ಓಲೆಯನ್ನು ಉಡುಗೊರೆಯಾಗಿ ನೀಡಿದ್ದರು. ಆ ಓಲೆಯ ಮೇಲೆ ಆಕೆಗೆ ತುಂಬಾ ಅಟ್ಯಾಚ್ಮೆಂಟ್ ಇತ್ತು. ಹಾಗಾಗಿ ಅದು ನನಗೆ ಬೇಕು ಅಂಥ ಕೇಳಿದ್ದೇನೆ ಎಂದರು.
ಮಗಳು ತುಂಬಾ ಆಸೆ ಪಟ್ಟು ಅದನ್ನು ಹಾಕಿಕೊಂಡಿದ್ದಳು. ಒಂದೂವರೆ ವರ್ಷದಿಂದ ಕಿವಿ ಓಲೆ ಬಿಚ್ಚಿರಲಿಲ್ಲ. ಹಾಗಾಗಿ ಅದು ನನಗೆ ಬೇಕು ಎಂದು ಕೇಳಿದ್ದೇನೆ. ಆಸ್ಪತ್ರೆಯಿಂದ ಯಾರು ಸರಿಯಾಗಿ ಪ್ರತಿಕ್ರಿಯೆ ನೀಡದಿದ್ದಕ್ಕೆ ದೂರು ನೀಡಿದ್ದೇನೆ ಎಂದು ತಿಳಿಸಿದರು.
ದಿವ್ಯಾಂಶಿ ಕಿವಿಯೋಲೆ ಕಳವು ವಿಚಾರಕ್ಕೆ ದೂರು ನೀಡಿದ ನಂತರ ತಾಯಿ ಅಶ್ವಿನಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಬಳಿಕ ಶವಾಗಾರದ ಬಳಿ ದಿವ್ಯಾಂಶಿ ಅಜ್ಜಿಗೆ ಒಳ್ಳೆಯ ಚಿಕಿತ್ಸೆ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಅಜ್ಜಿ ಜೊತೆ ಮಾತನಾಡುವ ಫೋಟೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಡಿಸಿಎಂ ತಮ್ಮ ಅಧಿಕೃತ ಇನ್ಸ್ಟ್ರಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಶವಾಗಾರದ ಬಳಿ ಕುಳಿತುಕೊಂಡು ಟ್ರೀಟ್ಮೆಂಟ್ ಬಗ್ಗೆ ಮಾತಾಡ್ತಾರೆ. ಶವಾಗಾರದಲ್ಲಿ ಏನ್ ಟ್ರೀಟ್ಮೆಂಟ್ ಕೊಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.