ಕ್ರೀಡೆ/ಸಿನಿಮಾಕ್ರೈಂವೈರಲ್ ನ್ಯೂಸ್

ಅರಣ್ಯ ಇಲಾಖೆಗೆ ಕೊಟ್ಟ ಮಾತನ್ನು ತಪ್ಪಿದರೇ ನಟ ಗೋಲ್ಡನ್ ಸ್ಟಾರ್ ಗಣೇಶ್? ಹೈಕೋರ್ಟ್‌ನಲ್ಲಿ ನಟ ಗಣೇಶ್​ಗೆ ಹೇಳಿದ್ದೇನು?

190

ನ್ಯೂಸ್‌ ನಾಟೌಟ್‌: ಬಂಡೀಪುರದ ಬಳಿಯ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಬೃಹತ್ ಮನೆ ನಿರ್ಮಾಣಕ್ಕೆ ಮುಂದಾಗಿದ್ದ ಚಿತ್ರನಟ ಗಣೇಶ್ ಕಿಶನ್ ಅಲಿಯಾಸ್ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಹಿನ್ನಡೆಯಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಇಂದು (ಸೋಮವಾರ) ತಿಳಿಸಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅರಣ್ಯ ಇಲಾಖೆ ನೀಡಿದ್ದ ನೊಟೀಸ್ ಪ್ರಶ್ನಿಸಿ ಗಣೇಶ್​ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್​ ಅವರಿದ್ದ ನ್ಯಾಯಪೀಠ, ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ತಾತ್ಕಾಲಿಕ ವಾಸದ ಮನೆ ನಿರ್ಮಾಣಕ್ಕೆ ಮಾತ್ರ ಅವಕಾಶವಿದೆ.

ಇದರ ಜೊತೆಗೆ, ಯಾವುದೇ ಬೃಹತ್ ಮತ್ತು ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗದು ಎಂದು ತಿಳಿಸಿತ್ತು ಎನ್ನಲಾಗಿದೆ.
ಅಲ್ಲದೇ, ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮವನ್ನು ಪ್ರಶ್ನಿಸಿ ಅರಣ್ಯ ಇಲಾಖೆ ನೀಡಿರುವ ನೊಟೀಸ್‌ಗೆ ಅರ್ಜಿದಾರ ಗಣೇಶ್ ಮುಂದಿನ ಒಂದು ವಾರದಲ್ಲಿ ಉತ್ತರ ನೀಡಬೇಕು. ಈ ಉತ್ತರವನ್ನು ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಿನ ನಾಲ್ಕು ವಾರಗಳಲ್ಲಿ ಪರಿಶೀಲನೆ ನಡೆಸಿ ವಿಚಾರಣೆ ಪೂರ್ಣಗೊಳಿಸಿಬೇಕು ಎಂದು ಸೂಚನೆ ನೀಡಿದೆ.

ಆದರೆ, ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಯಾವುದೇ ರೀತಿಯಲ್ಲಿಯೂ ಕಟ್ಟಡ ನಿರ್ಮಾಣ ಕಾಮಗಾರಿ ಪುನರಾರಂಭಿಸಬಾರದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರನಟ ಗಣೇಶ್ ಜಮೀನು ಖರೀದಿಸಿದ್ದರು. ಈ ಜಮೀನಿನಲ್ಲಿ ತೋಟದ ಮನೆ ಕಟ್ಟುವುದಕ್ಕೆ ಅನುಮತಿ ನೀಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಮನವಿ ಕುರಿತು ಪರಿಶೀಲನೆ ನಡೆಸಿದ್ದ ಅರಣ್ಯ ಇಲಾಖೆ ಮತ್ತು ಪ್ರಾದೇಶಿಕ ಆಯುಕ್ತರು ತಾತ್ಕಾಲಿಕ ವಾಸದ ಮನೆ ನಿರ್ಮಾಣಕ್ಕೆ ಅನುಮತಿಸಿದ್ದರು.

ಇದಕ್ಕೆ ಗಣೇಶ್ ಅವರು, ತಾತ್ಕಾಲಿಕ ವಾಸದ ಮನೆ ನಿರ್ಮಾಣ ಮಾಡಲಾಗುವುದು. ಯಾವುದೇ ರೀತಿಯ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಮುಂದಾಗುವುದಿಲ್ಲ. ಅಲ್ಲದೇ, ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳುವುದಿಲ್ಲ ಹಾಗೂ ವನ್ಯ ಜೀವಿಗಳಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗುವಂತಹ ಕ್ರಮಗಳನ್ನು ಕೈಗೊಳ್ಳಲಾಗುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಟ್ಟಿದರು.

ಆದರೆ ನಂತರದಲ್ಲಿ ಗಣೇಶ್‌ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ಪರಿಸರ ಪ್ರೇಮಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಅರಣ್ಯ ಇಲಾಖೆ ಗಣೇಶ್‌ಗೆ ನೊಟೀಸ್ ಜಾರಿ ಮಾಡಿತ್ತು. ಅಲ್ಲದೇ ಮುಂದಿನ ಆದೇಶದವರೆಗೂ ಕಾಮಗಾರಿ ನಡೆಸದಂತೆ ನಿರ್ದೇಶನ ನೀಡಿತ್ತು. ಇದನ್ನು ಪ್ರಶ್ನಿಸಿದ ಗಣೇಶ್​ ಹೈಕೋರ್ಟ್ ಮೆಟ್ಟಿಲೇರಿದ್ದರು.

See also  ವಿರಾಜಪೇಟೆ: ವಾಯುವಿಹಾರಕ್ಕೆಂದು ತೆರಳಿದ ವ್ಯಕ್ತಿಯನ್ನು ತುಳಿದು ಕೊಂದ ಕಾಡಾನೆ, ಕೊಡಗಿನಲ್ಲಿ ಮತ್ತೆ ಅಟ್ಟಹಾಸ ಮೆರೆದ ಪುಂಡ ಕಾಡಾನೆಗಳು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget