ನ್ಯೂಸ್ ನಾಟೌಟ್: ಪ್ರಸಕ್ತ ಬಜೆಟ್ ನಲ್ಲಿ ಗ್ರಾಮ ಪಂಚಾಯಿತಿಗೆ 22 ಲಕ್ಷ ರೂ.ನಿಂದ 60 ಲಕ್ಷ ರೂ. ವರೆಗೆ ಅನುದಾನ ನೀಡಲು 780 ಕೋಟಿ ರೂ. ಅನುದಾನ ನೀಡಲಾಗುವುದು. ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಈ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ರಾಜ್ಯ ಬಜೆಟ್ನಲ್ಲಿ ಮೀನುಗಾರರಿಗೆ ಬಂಪರ್ ಉಡುಗೊರೆ ಸಿಕ್ಕಿದೆ. ಕರಾವಳಿ ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲು ಉತ್ತೇಜಿಸಲಾಗಿದೆ. ಆಳಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ಮತ್ಸ್ಯಸಿರಿ ಯೋಜನೆಯನ್ನು ಉತ್ತೇಜಿಸಲಾಗಿದೆ. ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್/ಡೀಸೆಲ್ ಆಧಾರಿತ ಮೋಟಾರ್ ಇಂಜಿನ್ ಅಳವಡಿಸಲು ತಲಾ 50 ಸಾವಿರ ರೂಪಾಯಿಯಂತೆ ಸಹಾಯಧನಕ್ಕೆ 40 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಮೀನು ಉತ್ಪಾದನೆ ಹೆಚ್ಚಿಸಲು ಬೈಂದೂರಿನಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಯೋಜನೆ, ಕರಾವಳಿ ಜಿಲ್ಲೆಗಳಲ್ಲಿ ಆರ್ಟಿಫಿಶಿಯಲ್ ರೀಫ್ ಯೋಜನೆ ಜಾರಿಗೊಳಿಸಲಾಗಿದೆ. ಅಲ್ಲದೇ ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯಡಿ ಸಹಾಯಧನ ಕಲ್ಪಿಸಲು ಆದ್ಯತೆ ನೀಡಲಾಗಿದೆ.10,000 ವಸತಿ ರಹಿತ ಮೀನುಗಾರರಿಗೆ ವಸತಿ ನಿರ್ಮಾಣಕ್ಕೆ ಉತ್ತೇಜನ ನೀಡಲಾಗಿದೆ. ಉತ್ತಮ ತಳಿಯ ಬಲಿತ ಬಿತ್ತನೆ ಮೀನು ಮರಿಗಳ ದಾಸ್ತಾನು ಪ್ರೋತ್ಸಾಹಿಸಲು 20 ಕೋಟಿ ರೂ. ಅನುದಾನ ಕಾಯ್ದಿರಿಸಲಾಗಿದೆ.
ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ರೆಫರೆನ್ಸ್ ಪುಸ್ತಕ ಪರಿಚಯಿಸಲು ಬಜೆಟ್ನಲ್ಲಿ ಅನುದಾನ ಕಾಯ್ದಿರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಮೂಲಕ 20 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳಲ್ಲಿ ರೀಡಿಂಗ್ ಕಾರ್ನರ್ ಆರಂಭಿಸಲು ಯೋಜನೆಗೆ ಅನುದಾನ ಮೀಸಲಿರಿಸಲಾಗಿದೆ. ಪದವಿ ಶಿಕ್ಷಣ ಮುಗಿಸಿ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಯುವಸ್ನೇಹಿ ಯೋಜನೆಯಡಿ ತಲಾ 2,000 ರೂಪಾಯಿಯ ಒಂದು ಬಾರಿಯ ಆರ್ಥಿಕ ನೆರವು ಒದಗಿಸಲಾಗಿದೆ.