ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 163 ಸೆಕ್ಷನ್ ಇರುವಾಗಲೇ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ ಹರೀಶ್ ಪೂಂಜಾ ತೆಕ್ಕಾರಿನ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಎಂ.ಎಸ್.ಇಬ್ರಾಹಿಂ ಮುಸ್ಲಿಯಾರ್ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಾಸಕರ ವಿರುದ್ಧ ಬಿಎನ್ ಎಸ್ ಕಾಯ್ದೆ ಕಲಂ 196, 353(2) ಅಡಿ ಪ್ರಕರಣ ದಾಖಲಾಗಿದೆ.
ಶನಿವಾರ(ಮೇ.4) ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, “ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಹೊಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ” ಎಂದು ಹೇಳಿದ್ದರು ಎನ್ನಲಾಗಿದೆ.
“ದೇವಾಲಯದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಮಸೀದಿಗಳಿಗೆ ಏಕೆ ನೀಡಿದ್ದೀರಿ? ನಮಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ. ನೀವು ಮುಸ್ಲಿಮರಿಗೆ ಆಹ್ವಾನ ಪತ್ರಿಕೆ ನೀಡಿದ್ದರಿಂದಲೇ ಅವರು ಟ್ಯೂಬ್ ಲೈಟ್ ಹೊಡೆದು ಹಾಕಿದ್ದಾರೆ” ಎಂದು ಹರೀಶ್ ಪೂಂಜಾ ಭಾಷಣದಲ್ಲಿ ಆರೋಪಿಸಿದ್ದರು ಎನ್ನಲಾಗಿದೆ. ನಿಷೇದಾಜ್ಞೆ ಜಾರಿಯಲ್ಲಿರುವಾಗ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.