ನ್ಯೂಸ್ ನಾಟೌಟ್ : ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮಹಾದೇವಪ್ಪ ಹುಕ್ಕೇರಿ ಮೇಲೆ ಮರಾಠಿ ಪುಂಡರು ಹಲ್ಲೆ ಮಾಡಿದ ಬಳಿಕ ಎರಡು ರಾಜ್ಯಗಳ ನಡುವೆ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಇದು ಭಾಷಾ ಗಲಾಟೆಗೂ ಕಾರಣವಾಗಿತ್ತು. ಹೀಗಾಗಿ ಕರ್ನಾಟಕ-ಮಹಾರಾಷ್ಟ್ರ ನಡುವೆ ಭಾಷೆ ಗಲಾಟೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಮುಂದಾಗಿ ಸಂವಿಧಾನದ ಅವಕಾಶಗಳಂತೆ ವಿಶೇಷಾಧಿಕಾರಿ ನೇಮಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ.
ಇದೀಗ ಮತ್ತೊಮ್ಮೆ ಉಲ್ಬಣಗೊಂಡಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನಲೆ ನಿಮಗೆ ಈ ಪತ್ರವನ್ನು ಬರೆಯಲಾಗುತ್ತಿದೆ. ಎರಡೂ ರಾಜ್ಯಗಳ ಸರ್ಕಾರಗಳು ವಿವಾದವನ್ನು ತಣ್ಣಗಾಗಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರೂ, ಕಣ್ಣಿಗೆ ಕಾಣದ ಸಂಗತಿಗಳಿವೆ. ದೊಡ್ಡ ಪ್ರಮಾಣದ ಹಿಂಸಾಚಾರ, ಆಸ್ತಿಪಾಸ್ತಿ ನಷ್ಟ ಮತ್ತು ಗಡಿಯ ಎರಡೂ ಬದಿಗಳಲ್ಲಿನ ಆಡಳಿತಾತ್ಮಕ ವ್ಯವಸ್ಥೆಯ ಮೇಲೆ ಆಳವಾದ ಪರಿಣಾಮ ಬೀರಿದೆ. ಹಾಗಾಗಿ ಈ ಸಂದರ್ಭದಲ್ಲಿ ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಕೇಂದ್ರ ಸರ್ಕಾರದ ಪಾತ್ರವು ಪ್ರಾಮುಖ್ಯತೆಯನ್ನು ಪಡೆಯುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಭಾಷಾ ಅಲ್ಪಸಂಖ್ಯಾತರ ವಿಶೇಷ ಅಧಿಕಾರಿಯನ್ನು ಕೂಡಲೇ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ದಯಮಾಡಿ ನಿರ್ದೇಶಿಸಬೇಕೆಂದು ಪತ್ರದಲ್ಲಿ ವಿನಂತಿಸಲಾಗಿದೆ. ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ ಮತ್ತು ಕೇಂದ್ರಕ್ಕೆ ವರದಿ ಸಲ್ಲಿಸಬೇಕು. ಬಳಿಕ ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಒದಗಿಸಲು ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಬಹುದಾಗಿದೆ. ನಂತರ ಎರಡೂ ಕಡೆಯ ಸಾಮಾನ್ಯ ಜನರು ಶಾಂತಿಯುತ ಜೀವನ ನಡೆಸಬಹುದಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.