ನ್ಯೂಸ್ ನಾಟೌಟ್ : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆ ʻಭಾರತ್ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಶವವಾಗಿ ಪತ್ತೆಯಾಗಿದ್ದಾರೆ.
ಬಸ್ ನಿಲ್ದಾಣದ ಬಳಿ ಪತ್ತೆಯಾದ ಸೂಟ್ ಕೇಸ್ ನಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್ (22) ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.
ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್ ಕೇಸ್ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್ ಕೇಸ್ ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ. ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಹಿಮಾನಿ ನರ್ವಾಲ್ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಪುತ್ರ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಪಕ್ಷದ ಶಾಸಕ ಬಿಬಿ ಬಾತ್ರಾ ಅವರೊಂದಿಗೆ ಕಾಣಿಸಿಕೊಂಡಿದ್ದರು. ಅವರೊಂದಿಗಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.