ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದೀಗ ಮಲ್ಲಳ್ಳಿ ಜಲಪಾತ ತುಂಬಿ ಹರಿಯುತ್ತಿದ್ದು,ಜೀವ ಕಳೆ ಪಡೆದು ಕೊಂಡಿದೆ.
ಹಾಲಿನ ನೊರೆಯಂತೆ ಬೋರ್ಗರೆಯುತ್ತಾ ಧುಮ್ಮಿಕ್ಕುವ ಈ ಜಲಧಾರೆಯು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಜಲಪಾತದ ವೈಭವ ಕಣ್ಮನ ಸೆಳೆಯುತ್ತಿದೆ. ದೇಶ-ವಿದೇಶಗಳಿಂದ ಆಗಮಿಸುತ್ತಿರುವ ನೂರಾರು ಪ್ರವಾಸಿಗರು ಜಲಪಾತದ ಬಳಿ ಎಂಜಾಯ್ ಮಾಡುತ್ತಿದ್ದಾರೆ. ಈ ನಡುವೆ ನದಿ ಜಲಪಾತಗಳಿಗೆ ಇಳಿಯದಂತೆಯೂ ಜಿಲ್ಲಾಡಳಿತ ಅದೇಶ ನೀಡಿದೆ.
ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆಯುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹೀಗಾಗಿ ನದಿ, ತೊರೆ, ಜಲಪಾತಗಳಿಗೆ ಇಳಿಯುವುದು, ಸ್ನಾನ ಮಾಡುವುದನ್ನು ನಿಷೇಧಿಸಲಾಗಿದೆ. ನದಿಗಳು ತುಂಬಿ ಹರಿಯುತ್ತಿರುವುದರಿಂದ ಜಲಪಾತಗಳು ಕೂಡ ಮೈದುಂಬಿ ಧುಮ್ಮುಕ್ಕುತ್ತಿವೆ. ಈ ಸಂದರ್ಭದಲ್ಲಿ ಜಲಪಾತದ ತಳ ಭಾಗಕ್ಕೆ ಇಳಿಯುವ ಸಾಹಸ ಮಾಡಿ, ಬಹಳಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಜಲಪಾತದಲ್ಲಿ ಇಳಿಯದಂತೆ ಆದೇಶ ಹೊರಡಿಸಿದೆ. ಆದೇಶ ಉಲ್ಲಂಘಿಸಿದರೇ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.