ನ್ಯೂಸ್ ನಾಟೌಟ್: ಕುಡುಪು ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಆರೋಪಿಗಳನ್ನು ಪೊಲೀಸರು ಇಂದು(ಏ.30) ಬಂಧಿಸಿದ್ದಾರೆ.
ಏ.27ರ ಭಾನುವಾರ ಸಂಜೆ 5:30ರ ಸುಮಾರಿಗೆ ಮಂಗಳೂರಿನ ಹೊರವಲಯದ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದರು. ಮೃತದೇಹದ ಮರಣೋತ್ತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೃತನ ಬೆನ್ನಿಗೆ ಬಲವಾದ ಹೊಡೆತ ಬಿದ್ದಿದೆ. ಗಂಭೀರ ಗಾಯಗೊಂಡ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಮರಣ ಸಂಭವಿಸಿರುವುದು ಕಂಡುಬಂದಿದೆ.
ಅಪರಿಚಿತ ಮೃತದೇಹ ಅನುಮಾನಾಸ್ಪದವಾಗಿ ಸಿಕ್ಕಿದ ಹಿನ್ನೆಲೆಯಲ್ಲಿ ಚರ್ಚೆಗಳು ಅದಾಗಲೇ ಆರಂಭವಾಗಿತ್ತು. ಹಿಂದೂ ಯುವಕರು ಮುಸ್ಲಿಂ ಯುವಕನನ್ನು ಗುಂಪು ಹತ್ಯೆ ನಡೆಸಿದ್ದಾರೆ. ಇದೊಂದು ವ್ಯವಸ್ಥಿತ ಕೊಲೆ ಎಂದು ಸಿಪಿಐಎಂ, ಎಸ್ ಡಿಪಿಐ ಪಕ್ಷಗಳು ಆರೋಪ ಮಾಡಿದ್ದವು. ಈ ಬಗ್ಗೆ ತನಿಖೆ ನಡೆಸಿದಾಗ ಪೊಲೀಸರಿಗೆ ನೈಜ ವಿಚಾರ ಗೊತ್ತಾಗಿದೆ.
“ಏ.27ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿಯ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಈ ಸಂದರ್ಭ ವೈಯಕ್ತಿಕ ವಿಚಾರವೊಂದಕ್ಕೆ ಮೃತ ವ್ಯಕ್ತಿಗೆ ಮತ್ತು ಅಲ್ಲಿದ್ದ ಸಚಿನ್ ಎಂಬಾತನೊಂದಿಗೆ ವಾಗ್ವಾದ ನಡೆದಿತ್ತು. ಸಚಿನ್ ಆತನಿಗೆ ಥಳಿಸಿದ್ದು, ಬಳಿಕ ಅಲ್ಲಿದ್ದ 25ರಿಂದ 30 ಮಂದಿಯ ಗುಂಪು ಅಪರಿಚಿತ ವ್ಯಕ್ತಿಗೆ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ್ವ ತುಳಿದು ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಗಂಭೀರವಾಗಿ ಗಾಯಗೊಂಡು ವ್ಯಕ್ತಿ ಮೃತಪಟ್ಟಿದ್ದಾನೆ” ಎಂದು ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ದೀಪಕ್ ಕುಮಾರ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ 19 ಮಂದಿ ಮತ್ತು ಇತರರ ಮೇಲೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 37/2025, ಕಲಂ: 103(2), 115(2), 189(2), 190, 191(1), 191(3), 240 ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಸದ್ಯ ಈ ಕೃತ್ಯದಲ್ಲಿ ಸುಮಾರು 25ಕ್ಕೂ ಅಧಿಕ ಮಂದಿ ಭಾಗವಹಿಸಿರುವ ಸಂಶಯವಿದೆ ಎನ್ನಲಾಗಿದೆ. ಮೊದಲಿಗೆ 15 ಮಂದಿ ಹಾಗೂ ಮತ್ತೆ ಐವರು ಸೇರಿ ಒಟ್ಟು 20 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡಿ ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
MBBS ವಿದ್ಯಾರ್ಥಿಗಳಿಗೆ 80 ಕೋಟಿ ರೂ. ಸ್ಕಾಲರ್ ಶಿಪ್ ನೀಡದೆ ವಂಚನೆ..! ಮುಖಂಡನ ಮನೆ ಮೇಲೆ ಇಡಿ ದಾಳಿ..!