ನ್ಯೂಸ್ ನಾಟೌಟ್: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನಕ್ಕೆ ಬಂದಿದೆ. ಕೇಂದ್ರ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸಂಜಯ್ ಕುಮಾರ್ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದು ಮಹತ್ವದ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಮಕ್ಕಳಲ್ಲಿ ಬೊಜ್ಜು ಹೆಚ್ಚಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಹೀಗಾಗಿ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟದಲ್ಲಿ ಶೇ.10ರಷ್ಟು ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡಬೇಕು ಎಂದು ತಿಳಿಸಲಾಗಿದೆ.
ಕಡಿಮೆ ಎಣ್ಣೆಯ ಡಯಟ್, ಆರೋಗ್ಯಕರ ಆಹಾರ ಸೇವನೆಯ ಅಭ್ಯಾಸಗಳ ಬಗ್ಗೆ ಪೌಷ್ಠಿಕ ಆಹಾರ ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ. ಅಡುಗೆಯಲ್ಲಿ ಎಣ್ಣೆ ಬಳಕೆ ಕಡಿಮೆ ಮಾಡುವುದರ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು, ಪೋಷಕರಲ್ಲೂ ಈ ಬಗ್ಗೆ ಜಾಗೃತಿ ಮೂಡಿಸಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದರ ಜೊತೆಗೆ ವಿದ್ಯಾರ್ಥಿಗಳಲ್ಲಿ ದೈಹಿಕ ಕಸರತ್ತು, ಯೋಗಾಭ್ಯಾಸವನ್ನು ಉತ್ತೇಜಿಸಬೇಕು. ಆರೋಗ್ಯಕರ ಜೀವನ ಶೈಲಿ, ತೂಕ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುವ ಬಗ್ಗೆ ಪೋತ್ಸಾಹಿಸಲು ಶಿಕ್ಷಣ ಇಲಾಖೆಗೆ ಕೇಂದ್ರದ ಶಿಕ್ಷಣ ಇಲಾಖೆ ಸೂಚಿಸಿದೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೇ ಚರ್ಚಾ, ಮನ್ ಕೀ ಬಾತ್ ನಲ್ಲಿ ಬೊಜ್ಜಿನ ಅಪಾಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಮಕ್ಕಳಲ್ಲೂ ಕೂಡ ಬೊಜ್ಜು ಬೆಳೆಯುವುದನ್ನು ತಡೆಯಬೇಕು ಎಂದು ಹೇಳಿದ್ದರು.
ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಸ್ಕೀಮ್ ನಡಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಈ ಬಿಸಿಯೂಟದಲ್ಲಿ ಅಡುಗೆ ಎಣ್ಣೆ ಬಳಕೆಯನ್ನು ಶೇ.10ರಷ್ಟು ಕಡಿಮೆ ಮಾಡಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿಯ ಮಗನಿಂದ ವೇದಿಕೆಯಲ್ಲಿ ಕುಣಿಯುವಂತೆ ಪೊಲೀಸ್ ಅಧಿಕಾರಿಗೆ ಬೆದರಿಕೆ..! ವಿಡಿಯೋ ವೈರಲ್