ನ್ಯೂಸ್ ನಾಟೌಟ್: ಚಾರ್ ಮಿನಾರ್ ಬಳಿಯಿರುವ ಗುಲ್ಜಾರ್ ಹೌಸ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 17 ಮಂದಿ ಸಜೀವ ದಹನವಾಗಿರುವ ಘಟನೆ ಹೈದರಾಬಾದ್ ನಲ್ಲಿ ಇಂದು(ಮೇ.18)ನಡೆದಿದೆ.
ಮುಂಜಾನೆ 5:30ರ ಸುಮಾರಿಗೆ ಘಟನೆ ನಡೆದಿದೆ. ಗುಲ್ಜಾರ್ ಹೌಸ್ ನಲ್ಲಿ 30ಕ್ಕೂ ಹೆಚ್ಚು ಮಂದಿ ಇರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಅವಘಡದ ಪರಿಣಾಮ ಉಸಿರಾಟದ ತೊಂದರೆಯಿಂದಾಗಿ 16ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ರಾಜೇಂದ್ರ ಕುಮಾರ್ (67), ಅಭಿಷೇಕ್ ಮೋದಿ, ಸುಮಿತ್ರಾ, ಮುನ್ನಿಬಾಯ್, ಆರುಷಿ ಜೈನ್, ಶೀತಲ್ ಜೈನ್, ಇರಾಜ್ ಹಾಗೂ ಅರ್ಷಾದಿ ಗುಪ್ತಾ ಮತ್ತು ಇತರರ ಗುರುತು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ.
ಗುಲ್ಜಾರ್ ಹೌಸ್ ನ ಮೊದಲ ಮಹಡಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನೆಯ ಸಂಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಕಿಷನ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎನ್ ಡಿಆರ್ ಎಫ್ ಹಾಗೂ ಎಸ್ ಡಿಆರ್ ಎಫ್ ನಿಂದ ಕಾರ್ಯಾಚರಣೆ ಮುಂದುವರಿದಿದೆ. ಸಿಎಂ ರೇವಂತ್ ರೆಡ್ಡಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ.