ರಾಜಕೀಯವೈರಲ್ ನ್ಯೂಸ್

ಅಂದು ಪ್ರಧಾನಿ ಮೋದಿ ಮಾತು ಕೇಳಿದ್ದರೆ 5 ವರ್ಷ ನಾನೇ ಸಿಎಂ ಆಗಿರುತ್ತಿದ್ದೆ! ಎಚ್​​ಡಿಕೆ ಸ್ಫೋಟಕ ಹೇಳಿಕೆಯ ಹಿಂದಿನ ರಹಸ್ಯವೇನು?

186

ನ್ಯೂಸ್ ನಾಟೌಟ್: ಎಚ್​​ಡಿ ಕುಮಾರಸ್ವಾಮಿಯವರ ಆ ಒಂದು ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತನ್ನು ಅಂದು ಕೇಳಿದ್ದರೆ 5 ವರ್ಷ ಮುಖ್ಯಮಂತ್ರಿಯಾಗಿ ಇರುತ್ತಿದ್ದೆ. ಪದೇ ಪದೆ ಬಿಜೆಪಿಯ ಬಿ ಟೀಂ ಎಂದು ಜೆಡಿಎಸ್​​ ಅನ್ನು ಟೀಕಿಸುವ ಮುನ್ನ ಈ ವಿಚಾರ ತಿಳಿದಿರಲಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆಡಳಿತಾರೂಢ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭ ಆಪರೇಷನ್ ಕಮಲದ ವಿಚಾರ ಪ್ರಸ್ತಾಪವಾಯಿತು. ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಕುಮಾರಸ್ವಾಮಿ, ಆಪರೇಷನ್ ಕಮಲ ಎಂಬುದು ಇತ್ತು‌. ಆದರೆ ಮಾಧ್ಯಮಗಳಲ್ಲಿ ಕಳೆದ ಕೆಲವು ದಿನಗಳಿಂದ ಆಪರೇಷನ್ ಹಸ್ತ ಎಂಬ ಸುದ್ದಿ ಬರುತ್ತಿದೆ ಎಂದು ಕೆಣಕಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಏಕೆ ಅವರ ಜೊತೆ ಸೇರಿಕೊಂಡಿದ್ದೀರಿ ಎಂದು ಕುಮಾರಸ್ವಾಮಿಯನ್ನು ಟೀಕಿಸಿದರು.
ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ‌ ಅವರು 2019ರಲ್ಲಿ ನನ್ನ ಜೊತೆ ಒಂದೂವರೆ ಗಂಟೆ ಚರ್ಚೆ ಮಾಡಿದ್ದರು‌. ಅವರ ಮಾತು ಕೇಳಿದ್ದರೆ ಐದು ವರ್ಷ ಸಿಎಂ ಆಗಿರುತ್ತಿದ್ದೆ ಎಂದು ಹೇಳಿ ಸದನದಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಕಾಂಗ್ರೆಸ್ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದ ಸಂದರ್ಭ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ಮೋದಿ ನನ್ನನ್ನು ಕರೆದು ಚರ್ಚಿಸಿದ್ದರು. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರಲ್ಲ. ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ‌‌ ನೀಡಿದ್ದರು. ಅವರ ಮಾತು ಕೇಳಿದ್ದರೆ ಕಳೆದ ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಸಿಎಂ ಆಗಿರುತ್ತಿದ್ದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಲೋಕಸಭಾ ಚುನಾವಣೆಗಿಂತ 15 ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚೆಯಾಗಿತ್ತು. ಆದರೆ ನಾನು ಅದನ್ನು ತಿರಸ್ಕಾರ ಮಾಡಿದ್ದೆ ಎಂದರು. ಇದು ಕರ್ನಾಟಕ ರಾಜಕೀಯದಲ್ಲಿ ಹಲವು ಚರ್ಚೆಗೆ ಕಾರಣವಾಗಿದ್ದು, ಜೆಡಿಎಸ್ ಮತ್ತೆ ಬಿಜೆಪಿ ಜೊತೆ ಸೇರಲಿದೆ ಎಂಬ ಮಾತಿಗೆ ಮತ್ತಷ್ಟು ಪುಷ್ಠಿ ಸಿಕ್ಕಿದೆ. ಕೆಲವು ತಿಂಗಳಿನಿಂದ ಕುಮಾರಸ್ವಾಮಿ ಬಿಜೆಪಿ ಕಡೆ ಒಲವು ತೋರಿಸಿರುವುದು ಅವರ ಹೇಳಿಕೆಗಳಲ್ಲಿ ಬಹಿರಂಗವಾಗಿತ್ತು ಎನ್ನಲಾಗಿದೆ.

See also  ಮೊದಲ ಶೂನ್ಯ ಕರೆಂಟ್ ಬಿಲ್ ವಿತರಣೆ! ಹೇಗಿರಲಿದೆ ಶೂನ್ಯ ಬಿಲ್ ವಿತರಣೆ? ಈವರೆಗೆ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಿದ ಗ್ರಾಹಕರೆಷ್ಟು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget