ಬೆಂಗಳೂರು: ರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ, ಕೋವಿಡ್ ನಿರ್ವಹಣೆ ಮತ್ತು ಶಾಲೆ ಕಾಲೇಜುಗಳನ್ನು ಪುನರಾರಂಭಿಸುವ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸಿ ವಿಸ್ತೃತವಾಗಿ ಚರ್ಚಿಸಿದರು. ಸಭೆಯಲ್ಲಿ ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ಹಾಗೂ ರಾಜ್ಯದ ಕೋವಿಡ್ ಸ್ಥಿತಿಗತಿಯನ್ನು ಆಧರಿಸಿ, ಪ್ರಾಥಮಿಕ ಶಾಲೆ ಮತ್ತು 8ನೇ ತರಗತಿ ಪ್ರಾರಂಭಿಸುವ ಬಗ್ಗೆ ಆಗಸ್ಟ್ ತಿಂಗಳ ಅಂತ್ಯದಲ್ಲಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.