ಕರಾವಳಿಪುತ್ತೂರು

ಸೌಜನ್ಯ ಪ್ರಕರಣ ಮರು ತನಿಖೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರೇ ಪ್ರತಿಭಟನೆ, ಒಕ್ಕಲಿಗ ಗೌಡ ಸೇವಾ ಸಂಘ ಎಚ್ಚರಿಕೆ

221

ನ್ಯೂಸ್ ನಾಟೌಟ್: ಸೌಜನ್ಯ ಪ್ರಕರಣ ಈಗ ರಾಜ್ಯವ್ಯಾಪ್ತಿಯಾಗಿ ಸದ್ದಾಗುತ್ತಿದೆ. ಆಕೆಗೆ ನ್ಯಾಯ ಸಿಗಲೇಬೇಕು ಅನ್ನುವ ಕೂಗು ಹೆಚ್ಚುತ್ತಿದೆ. ಈ ನಡುವೆ ಒಕ್ಕಲಿಗ ಗೌಡ ಸೇವಾ ಸಂಘ ಕೂಡ ಸಿಡಿದೆದ್ದಿದೆ. ಸೌಜನ್ಯ ಪ್ರಕರಣವನ್ನು ಮರು ತನಿಖೆ ಮಾಡದೇ ಇದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, “ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಮರು ತನಿಖೆ ನಡೆಸಬೇಕು. ಹಿಂದಿನ ತನಿಖಾಧಿಕಾರಿಗಳನ್ನು ಮಂಪರು ಪರೀಕ್ಷೆಗೊಳಪಡಿಸಬೇಕು. ಕಠಿಣ ಕ್ರಮವನ್ನು ತೆಗೆದುಕೊಳ್ಳುವಲ್ಲಿ ಸರ್ಕಾರ ಎಡವಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

2011ರಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಯನ್ನು ನಿರಪರಾಧಿಯೆಂದು ನ್ಯಾಯಾಲಯ ಬಿಡುಗಡೆ ಮಾಡಿದೆ. ನೈಜ ಆರೋಪಿಗಳು ಯಾರೆಂದು ಇಲ್ಲಿಯವರೆಗೂ ಗೊತ್ತಾಗಿಲ್ಲ. ಆದ್ದರಿಂದ ಈ ಪ್ರಕರಣವನ್ನು ಮರು ತನಿಖೆ ನಡೆಸಬೇಕು. ನೈಜ ಅಪರಾಧಿಯನ್ನು ಪತ್ತೆ ಹಚ್ಚಿ ಸೂಕ್ತ ಶಿಕ್ಷೆ ನೀಡಬೇಕು. ಈಗಾಗಲೇ ಹಲವು ಸಂಘಟನೆಗಳು ಮತ್ತು ಸಾರ್ವಜನಿಕರು ಹೋರಾಟ ಮಾಡುತ್ತಾ ಬಂದಿದ್ದಾರೆ. ಮರು ತನಿಖೆ ಮಾಡದೆ ಇದ್ದಲ್ಲಿ ಒಕ್ಕಲಿಗ ಗೌಡ ಸಮಾಜ ಜಿಲ್ಲಾ ಸಮಿತಿಯಿಂದ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಹೋರಾಟಕ್ಕೆ ಸಂಬಂಧಪಟ್ಟಂತೆ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಗೌಡ ಸಮಿತಿಗಳ ಜಿಲ್ಲಾ ಒಕ್ಕೂಟ ರಚನೆ ಮಾಡಲಾಗಿದೆ. ಈ ಸಮಿತಿಯ ಮೂಲಕ ಮುಂದಿನ ಹೋರಾಟದ ರೂಪುರೇಷೆ ಮಾಡಲಾಗುವುದು. ಆ.28ರಂದು ಸಂಜೆ ಪುತ್ತೂರು ಗೌಡ ಸಮುದಾಯ ಭವನದಲ್ಲಿ ಪೂರ್ವ ಭಾವಿ ಸಭೆ ನಡೆಯಲಿದೆ ಎಂದು ತಿಳಿಸಿದರು.

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಅಭಿನವ ಭಾರತ ಮಿತ್ರ ಮಂಡಳಿ ಮತ್ತು ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ನೇತೃತ್ವದಲ್ಲಿ ಆ.28ರಂದು ಪುತ್ತೂರಿನಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಒಕ್ಕಲಿಗ ಗೌಡ ಸೇವಾ ಸಂಘ ಸಂಪೂರ್ಣ ಬೆಂಬಲ ನೀಡಲಿದೆ. ಸಂಘಟಕರು ಈಗಾಗಲೇ ಗೌಡ ಸಂಘಕ್ಕೆ ಮನವಿ ನೀಡಿದ್ದು, ಅದರಂತೆ ಸಂಘದಿಂದ ಪೂರ್ಣ ಬೆಂಬಲ ನೀಡಲಾಗುವುದು ಎಂದು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಸ್ಪಷ್ಟಪಡಿಸಿದ್ದಾರೆ.


ಸೌಜನ್ಯ ಪ್ರಕರಣದಲ್ಲಿ ಇಲ್ಲಿನ ತನಕ ಸರಿಯಾದ ತನಿಖೆ ನಡೆದಿಲ್ಲ. ಈ ನಿಟ್ಟಿನಲ್ಲಿ ಪ್ರಕರಣಕ್ಕೆ ಸಂಬಂಧಿಸಿ ಆಗಿನ ತನಿಖಾಧಿಕಾರಿಗಳು ಯಾರಿದ್ದಾರೋ ಅವರನ್ನೆಲ್ಲ ಮಂಪರು ಪರೀಕ್ಷೆಗೊಳಪಡಿಸಬೇಕು ಎಂದು ನಾವು ಆಗ್ರಹಿಸುತ್ತೇವೆ. ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹ ಒಂದು ವಾರ ನಿರಂತರ ನಡೆಯಲಿದೆ. ಜಿಲ್ಲೆಯ 8 ತಾಲೂಕಿನಿಂದ ಒಂದೊಂದು ದಿನ ಧರಣಿಯಲ್ಲಿ ಭಾಗವಹಿಸಲಿದೆ. ಸೌಜನ್ಯಳಿಗೆ ನ್ಯಾಯ ಸಿಗುವ ತನಕ ನಮ್ಮ ಹೋರಾಟ ನಡೆಯಲಿದೆ ಎಂದು ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಉಪಾಧ್ಯಕ್ಷ ಚಿದಾನಂದ ಬೈಲಾಡಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನಕಾರ್ಯದರ್ಶಿ ಸುಂದರ ಗೌಡ ನಡುಬೈಲು, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎ.ವಿ.ನಾರಾಯಣ, ಗೌಡ ಮಹಿಳಾ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ ಗೌಡ, ಸುರೇಶ್ ಗೌಡ ಕಲ್ಲಾರೆ, ಲಿಂಗಪ್ಪ ಗೌಡ ತೆಂಕಿಲ, ಶ್ರೀಧರ ಗೌಡ ಕಣಜಾಲು, ದಯಾನಂದ ಕೆ.ಎಸ್ ಉಪಸ್ಥಿತರಿದ್ದರು.

  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget