ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿ ದೇವಸ್ಥಾನಗಳಲ್ಲಿ ಒಂದಾಗಿರುವ ಬಯಲು ಗಣಪ ಎಂದೇ ಖ್ಯಾತಿ ಪಡೆದಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಸಂರಕ್ಷಣಾ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಇವರನ್ನು ನೂತನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಸೌತಡ್ಕ ದೇವಸ್ಥಾನದಲ್ಲಿ ಕಳೆದ ಕೆಲವು ತಿಂಗಳಿನಿಂದ ಜಾಗದ ವಿವಾದ ನಡೆಯುತ್ತಿದೆ. ಈ ವಿವಾದದ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಉಳಿಸಬೇಕು, ಅದರ ಸಂಪೂರ್ಣ ಆಸ್ತಿ ದೇವಸ್ಥಾನಕ್ಕೆ ಸೇರಬೇಕೆಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ಸಮಿತಿ ರಚಿಸಲಾಗಿದೆ. ಈ ಹಿಂದೆ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದ ಸುಬ್ರಹ್ಮಣ್ಯ ಶಬರಾಯ ಅವರು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಈ ಹಿನ್ನೆಲೆಯಲ್ಲಿ ಹೊಸ ಅಧ್ಯಕ್ಷರ ನೇಮಕವಾಗಿದೆ. ಕಳೆದ 20 ವರ್ಷಗಳ ಹಿಂದೆ ಖರೀದಿಸಲಾಗಿದ್ದ ಜಮೀನನ್ನು ಖಾಸಗಿ ಟ್ರಸ್ಟ್ ಸ್ವಾಧೀನ ಮಾಡಿಕೊಂಡಿದೆ. ಇದನ್ನು ಮರಳಿ ದೇಗುಲಕ್ಕೇ ಸಿಗುವಂತೆ ಮಾಡಬೇಕೆಂಬ ನಿಟ್ಟಿನಲ್ಲಿ ಪ್ರಶಾಂತ್ ರೈ ಅವರು ಮುಂಚೂಣಿಯಲ್ಲಿ ಶ್ರಮಿಸಿದ್ದಾರೆ. ಸೌತಡ್ಕ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿಯೂ ಈ ಹಿಂದೆ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಇವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಸದಸ್ಯರು ಸಭೆಯಲ್ಲಿ ತಿಳಿಸಿದ್ದಾರೆ.