ನ್ಯೂಸ್ ನಾಟೌಟ್: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೈಸೂರಿನ ಕೆ.ಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದ ವಾದ ಮಂಡನೆ ಪೂರ್ಣವಾಗಿದೆ. ಪ್ರಾಸಿಕ್ಯೂಷನ್ ಪರ ಬಿ.ಎನ್.ಜಗದೀಶ್, ಅಶೋಕ್ ನಾಯ್ಕ್ ವಾದ ಮಂಡಿಸಿದ್ದರೆ, ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ನಳಿನಾ ಮಾಯಗೌಡ ಪ್ರತಿವಾದ ಮಂಡಿಸಿದ್ದಾರೆ. ಇನ್ನು ಈ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ ಗಜಾನನ ಭಟ್ ಆದೇಶವನ್ನು ಕಾಯ್ದಿರಿಸಿದ್ದಾರೆ. ಜುಲೈ 30ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದ ತೀರ್ಪು ಪ್ರಕಟಿಸಲಿದ್ದು, ಪ್ರಜ್ವಲ್ ರೇವಣ್ಣಗೆ ಢವ ಢವ ಶುರುವಾಗಿದೆ.
ಜುಲೈ 30 ರಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದ್ದು, ಒಂದು ವೇಳೆ ಕೋರ್ಟ್, ಪ್ರಜ್ವಲ್ ರೇವಣ್ಣನನ್ನು ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಗಾಗಲಿದ್ದಾರೆ. ಇದರಿಂದ ಕೋರ್ಟ್ ಏನು ತೀರ್ಪು ಏನಾಗಲಿದೆ ಎನ್ನುವ ಆತಂಕದಲ್ಲಿ ಪ್ರಜ್ವಲ್ ರೇವಣ್ಣ ಇದ್ದಾರೆ. ಇನ್ನು ಮೈಸೂರು ಜಿಲ್ಲೆಯ ಕೆಆರ್ ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಸಂಬಂಧಿಸಿದಂತೆ ಎಚ್ ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದು, ಈಗಾಗಲೇ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರು ಜಾಮೀನು ಸಿಕ್ಕಿದೆ. ಆದ್ರೆ, ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಮಾತ್ರ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ.