ನ್ಯೂಸ್ ನಾಟೌಟ್: ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2025-26ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನೆರವೇರಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಪ್ರೊ. ಡಾ ಲೀಲಾಧರ್ ಡಿ.ವಿ. ಮಾತನಾಡಿ, ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳಲ್ಲಿ ನಾಯಕತ್ವ ಕೌಶಲ್ಯಗಳನ್ನು ತುಂಬಲು ಸಹಕಾರಿಯಾಗಿದೆ. ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಲವಾರು ವಿದ್ಯಾರ್ಥಿ ಪ್ರತಿನಿಧಿಗಳು ತಮ್ಮ ವೃತ್ತಿಪರ ಜೀವನದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಇದರಿಂದಾಗಿ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಜೀವನದಲ್ಲಿ ಮುಖ್ಯ ಪಾತ್ರ ವಹಿಸಿದೆ ಹಾಗೂ ಸಂಸ್ಥೆಯ ಬಹುಮುಖ್ಯ ಅಂಗವಾಗಿದೆ ಎಂದರು. ನೂತನವಾಗಿ ಆಯ್ಕೆಗೊಂಡ ವಿದ್ಯಾರ್ಥಿ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಒ.ಬಿ.ಜಿ ವಿಭಾಗ ಮುಖ್ಯಸ್ಥರು ಪ್ರೊ. ಡಾ. ಗೀತಾ ಜೆ. ದೊಪ್ಪಾ, ಜನರಲ್ ಮೆಡಿಸಿನ್ ವಿಭಾಗದ ಪ್ರೊ. ಡಾ. ಪ್ರಕಾಶ್ ರಾವ್, ಒ.ಬಿ.ಜಿ ವಿಭಾಗದ ಪ್ರೊ. ಡಾ. ಭವ್ಯ ಹೆಚ್ ಯು, ಕಮ್ಯೂನಿಟಿ ಮೆಡಿಸಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಅಪೂರ್ವ ದೊರೆ, ಮತ್ತು ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಡಾ. ಭವ್ಯ ಎಚ್. ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿನಿ ದೃತಿ ಪ್ರಾರ್ಥಿಸಿದರು. ಡಾ. ಪ್ರಕಾಶ್ ರಾವ್ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಜನರಲ್ ಸೆಕ್ರೆಟರಿ ನಿಕ್ಷೇಪ್ ಹಾಗೂ ಗೌರಿ ವಂದಿಸಿದರು. Ann ಬಿಜು ಹಾಗೂ ಭೂಮಿ ಕಾರ್ಯಕ್ರಮ ನಿರೂಪಿಸಿದರು.