ಕ್ರೈಂಬೆಂಗಳೂರು

ವಿದ್ಯಾರ್ಥಿನಿಯನ್ನು ಹೊರ ಹಾಕಿದ ಶಾಲೆ ವಿರುದ್ಧ ಕೇಸ್..! ಹೈಕೋರ್ಟ್‌ನಿಂದ ಶಾಲೆಗೆ 1 ಲಕ್ಷ ದಂಡ..!

170

ನ್ಯೂಸ್ ನಾಟೌಟ್ : ನ್ಯಾಯಾಲಯದ ಆದೇಶದಂತೆ 9ನೇ ತರಗತಿ ವಿದ್ಯಾರ್ಥಿನಿಗೆ ತರಗತಿಗೆ ಹಾಜರಾಗಲು ಅನುಮತಿ ನೀಡದ ಮಲ್ಲೇಶ್ವರಂನ ಬ್ರಿಗೇಡ್‌ ಶಾಲೆಗೆ ಹೈಕೋರ್ಟ್‌, 1 ಲಕ್ಷ ರೂ.ದಂಡ ವಿಧಿಸಿದೆ ಎನ್ನಲಾಗಿದೆ.

ಅಲ್ಲದೆ, ಶಾಲೆಯ ಆಡಳಿತ ಮಂಡಳಿ ಕೋರ್ಟ್‌ ಆದೇಶವಿದ್ದರೂ ಅದನ್ನು ಪಾಲಿಸದೆ ವಿದ್ಯಾರ್ಥಿನಿಯ ಭವಿಷ್ಯದೊಡನೆ ಚೆಲ್ಲಾಟವಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರಾದ ಜಗದೀಪ್‌ ರಾವ್‌ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಸಿಜೆ ಪಿ.ಬಿ.ವರ್ಲೆ ಮತ್ತು ನ್ಯಾ. ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ ಎಂದು ವರದಿ ತಿಳಿಸಿದೆ.

ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡದೆ ಶಿಕ್ಷಣ ಸಂಸ್ಥೆಯು ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ ಎಂದು ಹೇಳಿರುವ ನ್ಯಾಯಾಲಯ ಅದಕ್ಕೆ ದಂಡ ತೆರಬೇಕಾಗಿದೆ ಎಂದು ಆದೇಶಿಸಿ, ಮುಂದಿನ ಎರಡು ವಾರಗಳಲ್ಲಿ ದಂಡದ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಾವತಿಸಬೇಕು ಎಂದು ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥ ಪಡಿಸಿದೆ ಎನ್ನಲಾಗಿದೆ.

ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ” 9 ಮತ್ತು 10ನೇ ತರಗತಿಗಳು ಶಿಕ್ಷಣದ ಪ್ರಮುಖ ಘಟ್ಟಗಳಾಗಿವೆ ಎಂಬುದಾಗಿ ತಿಳಿದಿರುವ ಪೋಷಕರು ಮಕ್ಕಳು ಯಾವುದೇ ತರಗತಿಯನ್ನು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳುತ್ತಿರುತ್ತಾರೆ. ಆದರೆ, ಶಾಲಾ ಆಡಳಿತ ಮಂಡಳಿಯ ನಡವಳಿಕೆ ದುರದೃಷ್ಟಕರ. ಇದರಿಂದಾಗಿ 50ಕ್ಕೂ ಅಧಿಕ ವಿದ್ಯಾರ್ಥಿಗಳ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಈ ನಷ್ಟವನ್ನು ಹಣದ ಮೂಲಕ ಭರಿಸಲು ಸಾಧ್ಯವಿಲ್ಲ. ಆದರೆ, ಅಂತಹ ವರ್ತನೆ ತೋರಿದವರನ್ನು ಹಗುರವಾಗಿ ನೋಡುವುದು ಸರಿಯಲ್ಲ. ಇಂತಹ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆಯ ಸಂದೇಶ ರವಾನೆ ಮಾಡಬೇಕು” ಎಂದು ಅಭಿಪ್ರಾಯಪಟ್ಟಿತು ಎನ್ನಲಾಗಿದೆ.
ಅಲ್ಲದೆ, ಇನ್ನು ಮುಂದೆ ಪ್ರತಿವಾದಿ ಶಿಕ್ಷಣ ಸಂಸ್ಥೆ ಮಾತ್ರವಲ್ಲದೆ, ಇತರೆ ಯಾವುದೇ ಶಿಕ್ಷಣ ಸಂಸ್ಥೆಯು ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡಲು ಮುಂದಾಗಬಾರದು ಎಂದು ಎಚ್ಚರಿಕೆ ನೀಡಿದೆ.

ಅರ್ಜಿದಾರರ ಪರ ವಕೀಲರು, ”ಪ್ರಕರಣ ಸಂಬಂಧ ವಿಚಾರಣೆ ನಡೆಸಿ ವಿದ್ಯಾರ್ಥಿಗೆ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡುವಂತೆ ನ್ಯಾಯಾಲಯ ನೀಡಿದ್ದ ಆದೇಶವನ್ನು ಶಾಲಾ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದರೂ, ಅರ್ಜಿದಾರರ ಮಗಳನ್ನು ತರಗತಿ ಪ್ರವೇಶಕ್ಕೆ ಅವಕಾಶ ನೀಡಲಿಲ್ಲ” ಎಂದು ತಿಳಿಸಿದರು.
ಪ್ರಕರಣದಲ್ಲಿ ಅರ್ಜಿದಾರರ ಪುತ್ರಿ ಶಾಲೆಯ ನಿಯಮಗಳ ವಿರುದ್ಧ ನಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಶಾಲೆಯು 10 ಸಾವಿರ ರೂ. ದಂಡ ಮತ್ತು ಮುಚ್ಚಳಿಕೆ ನೀಡಬೇಕೆಂದು ವಿದ್ಯಾರ್ಥಿನಿಗೆ ಸೂಚಿಸಿತ್ತು. ದಂಡ ಮತ್ತು ಮುಚ್ಚಳಿಕೆ ಸಲ್ಲಿಸದ ಹಿನ್ನೆಲೆಯಲ್ಲಿ ತರಗತಿಗೆ ಹಾಜರಾಗಲು ಅವಕಾಶ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಪೋಷಕರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ನ್ಯಾಯಾಲಯ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿನಿಗೆ ಅವಕಾಶ ನೀಡುವಂತೆ ಮಧ್ಯಂತರ ಆದೇಶ ನೀಡಿತ್ತು. ಆದರೆ ಅದನ್ನು ಪಾಲಿಸಿಲ್ಲಎಂದು ಪೋಷಕರು ನ್ಯಾಯಾಂಗ ನಿಂದನೆ ಅರ್ಜಿ ಹೂಡಿದ್ದರು.

  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget