ನ್ಯೂಸ್ ನಾಟೌಟ್: ಸುರತ್ಕಲ್ ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಅಡುಗೆ ಮನೆಯ ಸಿಲಿಂಡರ್ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗಾಯಗೊಂಡವರು ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ ಪುಷ್ಪಾ (72) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಗ್ಯಾಸ್ ಸೋರಿಕೆಯಾಗಿರುವುದು ಗಮನಕ್ಕೆ ಬಾರದೆ ವಸಂತಿ ಮಧ್ಯಾಹ್ನ ಅಡುಗೆ ಕೋಣೆಗೆ ಹೋಗಿ ಸ್ಟವ್ಗೆ ಬೆಂಕಿ ಹಚ್ಚುತ್ತಿದ್ದಂತೆ ಏಕಾಏಕಿ ಬೆಂಕಿ ವ್ಯಾಪಿಸಿಕೊಂಡಿತು. ಅವರು ಸಹಾಯಕ್ಕಾಗಿ ಕೂಗಿದಾಗ ಹೊರಗೆ ಬಟ್ಟೆ ಒಗೆಯುತ್ತಿದ್ದ ಪುಷ್ಪಾ ಧಾವಿಸಿ ಬಂದು ಹೊರಗಿನಿಂದ ಬಾಗಿಲು ತೆರೆಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಅವರಿಗೂ ಚಾಚಿತು. ಅವರಿಬ್ಬರ ಕಿರುಚಾಟ ಕೇಳಿ ಅಕ್ಕಪಕ್ಕದವರು ಧಾವಿಸಿ ಇಬ್ಬರನ್ನೂ ಹೊರಗೆಳೆದು ಬೆಂಕಿ ನಂದಿಸಲು ಸಹಾಯ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ವಸಂತಿ ಧರಿಸಿದ್ದ ಸೀರೆ ಅವರ ಮೈಗೆ ಅಂಟಿಕೊಂಡಿತ್ತು. ಬಳಿಕ ಸೀರೆಯನ್ನು ಕತ್ತರಿಸಿ ತೆಗೆಯಬೇಕಾಯಿತು. ಅದಾಗಲೇ ಕೈ, ಮುಖದ ಭಾಗ ಮತ್ತಿತರ ಕಡೆ ಬೆಂಕಿ ತಗುಲಿತ್ತು ಎಂದು ನೆರವಿಗೆ ಧಾವಿಸಿದವರು ತಿಳಿಸಿದ್ದಾರೆ.
ಮನೆ ಯಜಮಾನ ವಾಮನ ಅಯ್ಯಪ್ಪ ವೃತಧಾರಿಯಾಗಿದ್ದು, ಮನೆ ಬಳಿಯಿರುವ ಸಣ್ಣ ಅಡುಗೆ ಕೋಣೆಯಲ್ಲಿ ಪ್ರತ್ಯೇಕವಾಗಿ ಅಡುಗೆ ಮಾಡಿಕೊಳ್ಳುತ್ತಿದ್ದರು. ಕೋಣೆಯ ಒಳಗೆ ಮತ್ತೆರಡು ಅನಿಲ ಸಿಲಿಂಡರ್ ಗಳಿದ್ದವು . ಆದರೆ ಅದಕ್ಕೆ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ದುರಂತದಲ್ಲಿ ಮನೆಯ ಛಾವಣಿಯ ಶೀಟ್ ಹಾರಿಹೋಗಿ ಸ್ಫೋಟದಂತಹ ಶಬ್ದ ಕೇಳಿಸಿದೆ. ಮನೆಯ ಹೊರಭಾಗಕ್ಕೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿತ್ತು. ಘಟನೆಯಿಂದ ಅಪಾರ ಹಾನಿ ಸಂಭವಿಸಿದೆ ಎನ್ನಲಾಗಿದೆ.
Click