ನ್ಯೂಸ್ ನಾಟೌಟ್: ತಿರುಮಲ ತಿರುಪತಿಯಲ್ಲಿ ಕೆಲಸ ಮಾಡುವ ವೇಳೆ ಹಿಂದೂಯೇತರ ಧಾರ್ಮಿಕ ಆಚರಣೆಗಳನ್ನು ಅನುಸರಿಸುತ್ತಿರುವ 18 ಮಂದಿ ಸಿಬ್ಬಂದಿ ವಿರುದ್ಧ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
ತಿರುಮಲದಲ್ಲಿ ಕೆಲಸ ಮಾಡುವ ಹಿಂದೂಯೇತರ ಸಿಬ್ಬಂದಿಯ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ಕೋರಿ ಆಂಧ್ರಪ್ರದೇಶ ಸರ್ಕಾರಕ್ಕೆ ಟಿಟಿಡಿ ಮಂಡಳಿ ಇತ್ತೀಚೆಗೆ ಪತ್ರ ಬರೆದಿತ್ತು. ‘ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳೇ ಆಗಿರಬೇಕು. ಟಿಟಿಡಿಯು ಹಿಂದೂ ದತ್ತಿ ಸಂಸ್ಥೆಯಾಗಿರುವುದರಿಂದ ಹಿಂದೂಯೇತರರು ಸಿಬ್ಬಂದಿಯಾಗಿ ಮುಂದುವರಿಯಲು ಅವಕಾಶ ನೀಡುವುದಿಲ್ಲ’ ಎಂದು ಟಿಟಿಡಿ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಿ.ಆರ್.ನಾಯ್ಡು ಈ ಹಿಂದೆ ಘೋಷಿಸಿದ್ದರು.
‘ಇತರ ಧರ್ಮಕ್ಕೆ ಸೇರಿದ ಸಿಬ್ಬಂದಿಯನ್ನು ಸರ್ಕಾರದ ಇತರ ಇಲಾಖೆಗಳಿಗೆ ನಿಯುಕ್ತಿಗೊಳಿಸುವ ಅಥವಾ ಸ್ವಯಂ ನಿವೃತ್ತಿಗೆ (ವಿಆರ್ಎಸ್) ಅವಕಾಶ ಕಲ್ಪಿಸುವ ಕುರಿತು ಸಮಾಲೋಚನೆ ನಡೆಸಲಾಗುವುದು’ ಎಂದಿದ್ದರು. ‘ತಿರುಮಲದಲ್ಲಿ ಯಾವುದೇ ರೀತಿಯ ರಾಜಕೀಯ ಹೇಳಿಕೆಗಳಿಗೆ ಅವಕಾಶ ನೀಡುವುದಿಲ್ಲ. ಅಂತಹ ವ್ಯಕ್ತಿಗಳು ಮತ್ತು ರಾಜಕೀಯ ಪಕ್ಷಗಳ ಪರ ಪ್ರಚಾರ ಮಾಡುವವರ ವಿರುದ್ಧ ಅಗತ್ಯಬಿದ್ದರೆ ಕಾನೂನುಬದ್ಧವಾಗಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ನಾಯ್ಡು ಹೇಳಿಕೆ ನೀಡಿದ್ದರು.