ಗುಜರಿ ಸಾಮಾನುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಸಹಿತ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಉಡುಪಿಯ ಅಂಬಾಗಿಲು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು(ಮಾ.23) ಮಧ್ಯಾಹ್ನ ನಡೆದಿದೆ.
ಗುಜರಿ ಸಾಮಾನುಗಳನ್ನು ಕೊಂಡೊಯ್ಯುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿಯೇ ಪಲ್ಟಿಯಾಯಿತು. ಇದರ ಪರಿಣಾಮ ಅದರಲ್ಲಿದ್ದ ಕಾರ್ಮಿಕರು ಸೇರಿ ಒಟ್ಟು ಆರು ಮಂದಿ ಗಾಯಗೊಂಡರು.
ಕೂಡಲೇ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಸಮಾಜ ಸೇವಕ ವಿಶು ಶೆಟ್ಟಿ ಗಾಯಗೊಂಡ ಲಾರಿ ಚಾಲಕ, ನಾಲ್ಕು ಮಂದಿ ಕಾರ್ಮಿಕರು ಹಾಗೂ ಬೈಕ್ ಸವಾರನನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.
ಈ ದುರ್ಘಟನೆ ಸಂಭವಿಸುವ ಸ್ವಲ್ಪ ಮುಂಚೆ ಅದೇ ಸ್ಥಳದಲ್ಲಿ ಬೈಕ್ ಸವಾರನೊಬ್ಬ ತನ್ನ ಬೈಕ್ ನಿಲ್ಲಿಸಿ ಪಕ್ಕದಲ್ಲಿ ನಿಂತಿದ್ದರು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾನೆ. ಆದರೆ ಆತನ ಬೈಕ್ ಮಾತ್ರ ಲಾರಿಯ ಅಡಿಗೆ ಬಿದ್ದು ನಜ್ಜುಗುಜ್ಜಾಗಿದೆ. ಉಡುಪಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.